ನವದೆಹಲಿ: ದೆಹಲಿ ವಿಧಾನಸಭೆಯ ಆವರಣಕ್ಕೆ ಎಎಪಿ ಶಾಸಕರ ಪ್ರವೇಶವನ್ನು ತಡೆಯಲಾಗುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕಿ ಆತಿಶಿ ಹೇಳಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬಂದ ನಂತರ ‘ಸರ್ವಾಧಿಕಾರದ ಎಲ್ಲಾ ಮಿತಿಗಳನ್ನು ದಾಟುತ್ತಿದೆ’ ಎಂದು ಅವರು ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಸದನದಲ್ಲಿ ಜೈ ಭೀಮ್ ಘೋಷಣೆಗಳನ್ನು ಕೂಗಿದ್ದಕ್ಕಾಗಿ ಎಎಪಿ ಶಾಸಕರನ್ನು ಮೂರು ದಿನಗಳ ಕಾಲ ಅಮಾನತುಗೊಳಿಸಲಾಗಿದೆ. ಇಂದು (ಗುರುವಾರ) ಶಾಸಕರಿಗೆ ವಿಧಾನಸಭೆಯ ಆವರಣವನ್ನು ಪ್ರವೇಶಿಸಲು ಸಹ ಅವಕಾಶ ನೀಡುತ್ತಿಲ್ಲ. ದೆಹಲಿ ವಿಧಾನಸಭೆಯ ಇತಿಹಾಸದಲ್ಲಿ ಇದುವರೆಗೆ ಈ ರೀತಿ ಸಂಭವಿಸಿಲ್ಲ’ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಕಚೇರಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್, ಭಗತ್ ಸಿಂಗ್ ಅವರ ಭಾವಚಿತ್ರಗಳನ್ನು ತೆಗೆದುಹಾಕಲಾಗಿದೆ ಎಂದು ಆರೋಪಿಸಿ ಸದನದಲ್ಲಿ ಆತಿಶಿ ಮತ್ತು ಇತರ ಎಎಪಿ ಶಾಸಕರು ಪ್ರತಿಭಟನೆ ನಡೆಸಿದ್ದರು. ಘೋಷಣೆಗಳನ್ನು ಕೂಗಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರ ಭಾಷಣಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಪ್ರತಿಪಕ್ಷ ನಾಯಕಿ ಆತಿಶಿ ಸೇರಿದಂತೆ ಎಎಪಿಯ 21 ಶಾಸಕರನ್ನು ದೆಹಲಿ ವಿಧಾನಸಭೆ ಸ್ಪೀಕರ್ ವಿಜೇಂದರ್ ಗುಪ್ತಾ ಅವರು ಮಂಗಳವಾರ ಸದನದಿಂದ ಮೂರು ದಿನಗಳ ಕಾಲ ಅಮಾನತುಗೊಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.