ಪಟ್ನಾ: ದೇಶದಾದ್ಯಂತ ಹೋಳಿ ಆಚರಣೆಯ ನಡುವೆಯೇ ಬಿಹಾರದ ನಳಂದ ಜಿಲ್ಲೆಯಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬರ ಮೇಲೆ ಆ್ಯಸಿಡ್ ಎರಚಿದೆ. ಪರಿಣಾಮವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
'ನಧಾ ಗ್ರಾಮದಲ್ಲಿ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸಂತ್ರಸ್ತನ ಗುರುತು ಪತ್ತೆಹಚ್ಚುವ ಕಾರ್ಯ ಪ್ರಗತಿಯಲ್ಲಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ನಳಂದಾ ಜಿಲ್ಲೆಯ ಎಸ್ಡಿಪಿಒ ಕೃಷ್ಣ ಮುರಾರಿ ಪ್ರಸಾದ್ ತಿಳಿಸಿದ್ದಾರೆ.
ದಾಳಿಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೂ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಆದರೆ, ಅಲ್ಲಿ ನೆರೆದಿದ್ದ ಅಪಾರ ಸಂಖ್ಯೆಯ ಗ್ರಾಮಸ್ಥರು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸ್ಥಳದಲ್ಲಿ ಭಾರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಮೂಲಗಳ ಪ್ರಕಾರ, ಆರೋಪಿಗಳು ಕೂಡ ಅದೇ ಗ್ರಾಮದವರಾಗಿದ್ದು, ಅವರ ಮನೆಗಳ ಮೇಲೆ ಗ್ರಾಮಸ್ಥರು ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.