ನವದೆಹಲಿ: ಅಗಸ್ಟಾ ವೆಸ್ಟ್ಲ್ಯಾಂಡ್ ಹೆಲಿಕಾಪ್ಟರ್ ಹಗರಣದ ಆರೋಪಿ ಕ್ರಿಶ್ಚಿಯನ್ ಮಿಷೆಲ್ ಜೇಮ್ಸ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಇದೇ 28ರಂದು ನಡೆಸುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.
ಕ್ರಿಶ್ಚಿಯನ್ ವಿರುದ್ಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ಇಡಿ) ಎರಡು ಪ್ರತ್ಯೇಕ ಮೊಕದ್ದಮೆಗಳನ್ನು ದಾಖಲಿಸಿವೆ. ತನಿಖಾ ಸಂಸ್ಥೆಗಳ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ಅವರು ಕೋರ್ಟ್ಗೆ ಹಾಜರಾಗಲಿದ್ದಾರೆ.ಈ ಜಾಮೀನು ಅರ್ಜಿಗೆ ಸಂಬಂಧಿಸಿ ಸಿಬಿಐ ಮತ್ತು ಇ.ಡಿಗಳ ಪ್ರತಿಕ್ರಿಯೆಯನ್ನು ಸುಪ್ರೀಂ ಕೋರ್ಟ್ ಮೇನಲ್ಲಿ ಕೇಳಿತ್ತು.
ಇಟಲಿ ಮೂಲದ ಅಗಸ್ಟಾ ವೆಸ್ಟ್ಲ್ಯಾಂಡ್ ಸಂಸ್ಥೆಯಿಂದ 12 ವಿವಿಐಪಿ ಹೆಲಿಕಾಪ್ಟರ್ಗಳ ಖರೀದಿಯಲ್ಲಿ ₹3,600 ಕೋಟಿ ಹಗರಣ ನಡೆದಿತ್ತು ಎಂದು ಆರೋಪಿಸಲಾಗಿರುವ ಹಗರಣವು 2012ರಲ್ಲಿ ಬೆಳಕಿಗೆ ಬಂದಿತು. ಖರೀದಿಯಲ್ಲಿ ಮಧ್ಯಸ್ಥಿಕೆ ವಹಿಸಿದ್ದರು ಎನ್ನಲಾದ ಬ್ರಿಟನ್ ನಿವಾಸಿ ಕ್ರಿಶ್ಚಿಯನ್ ಅವರನ್ನು 2018ರ ಡಿಸೆಂಬರ್ನಲ್ಲಿ ವಶಕ್ಕೆ ಪಡೆಯಲಾಗಿತ್ತು. ಜಾಮೀನು ಕೋರಿ ಅವರು ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅದನ್ನು ಕೋರ್ಟ್ ಮಾರ್ಚ್ 11 ತಿರಸ್ಕರಿಸಿತ್ತು. ಬಳಿಕ ಅವರು ಸುಪ್ರೀಂ ಕೋರ್ಟ್ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.