ಲಖನೌ: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಸಿಬಿಐ ವಿಶೇಷ ನ್ಯಾಯಾಲಯವು ಜೂನ್ 4ರಿಂದ ಬಿಜೆಪಿ ನಾಯಕರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾ ಭಾರತಿ ಸೇರಿದಂತೆ ಪ್ರಕರಣದ ಆರೋಪಿಗಳ ಹೇಳಿಕೆಗಳನ್ನು ದಾಖಲಿಸಲಿದೆ.
ಜೂನ್ 4ರಿಂದ 32 ಆರೋಪಿಗಳನ್ನು ಹಾಜರುಪಡಿಸುವಂತೆ ಪ್ರತಿವಾದಿಗಳಿಗೆ ವಿಶೇಷ ನ್ಯಾಯಾಧೀಶರಾದ ಎಸ್.ಕೆ.ಯಾದವ್ ಅವರು ಗುರುವಾರ ಸೂಚಿಸಿದ್ದಾರೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಆರೋಪಿಗಳು ಖುದ್ದಾಗಿ ಹಾಜರಾಗುತ್ತಾರೆಯೇ ಅಥವಾ ವಿಡಿಯೊ ಕಾನ್ಫರೆನ್ಸ್ ಮೂಲಕ ಹೇಳಿಕೆಗಳನ್ನು ದಾಖಲಿಸಲಾಗುವುದೇ ಎನ್ನುವುದರ ಕುರಿತು ಸ್ಪಷ್ಟನೆ ದೊರಕಿಲ್ಲ.
ಪ್ರಕರಣದ ವಿಚಾರಣೆಯನ್ನು ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಬೇಕು, ಆಗಸ್ಟ್ 31ರೊಳಗೆ ತೀರ್ಪು ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್ ಮೇ 8ರಂದುಸೂಚಿಸಿತ್ತು.ವಿಚಾರಣೆಯನ್ನು ಪೂರ್ಣಗೊಳಿಸಲು ನೀಡಲಾಗಿದ್ದಕಾಲಾವಕಾಶ ವಿಸ್ತರಣೆ ಕೋರಿ ಎಸ್.ಕೆ.ಯಾದವ್ ಅವರು ಸಲ್ಲಿಸಿದ್ದ ಮನವಿ ಪರಿಗಣಿಸಿದ್ದ ಸುಪ್ರೀಂ ಕೋರ್ಟ್,ಸಾಕ್ಷ್ಯಗಳನ್ನು ದಾಖಲಿಸಲು ಹಾಗು ವಿಚಾರಣೆ ಸಂದರ್ಭದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಗೆ ವಿಡಿಯೊ ಕಾನ್ಫರೆನ್ಸಿಂಗ್ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಸೂಚಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.