ADVERTISEMENT

ಇಂದು, ನಾಳೆ ಬ್ಯಾಂಕ್‌ ನೌಕರರ ಮುಷ್ಕರ: ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2021, 3:39 IST
Last Updated 16 ಡಿಸೆಂಬರ್ 2021, 3:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್‌ ಸಂಘಟನೆಗಳ ಸಂಯುಕ್ತ ವೇದಿಕೆಯು (ಯುಎಫ್‌ಬಿಯು) ಗುರುವಾರ ಮತ್ತು ಶುಕ್ರವಾರ (ಡಿಸೆಂಬರ್ 16, 17) ದೇಶದಾದ್ಯಂತ ಮುಷ್ಕರ ನಡೆಸಲಿದೆ. ಇದರಿಂದಾಗಿ ಈ ಎರಡು ದಿನ ರಾಷ್ಟ್ರೀಕೃತ ಬ್ಯಾಂಕ್‌ಗಳ ಶಾಖೆಗಳಲ್ಲಿ ಹಣ ವರ್ಗಾವಣೆ, ಸ್ವೀಕೃತಿ, ಸಾಲ ಮಂಜೂರಾತಿ, ಚೆಕ್‌ ಕ್ಲಿಯರೆನ್ಸ್‌ನಂತಹ ಸೇವೆಗಳಿಗೆ ಅಡ್ಡಿಯಾಗಲಿದೆ.

ಆರಂಭಿಕ ಹಂತದಲ್ಲಿ ಎರಡು ಬ್ಯಾಂಕ್‌ಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲುಕೇಂದ್ರ ಸರ್ಕಾರ ಮುಂದಾಗಿದೆ. ಇದನ್ನು ವಿರೋಧಿಸಿ ಮೂರು ಸಾವಿರಕ್ಕೂ ಅಧಿಕ ಬ್ಯಾಂಕ್‌ ನೌಕರರು ಮತ್ತು ಅಧಿಕಾರಿಗಳು ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ ಎಂದು ಭಾರತೀಯ ರಾಷ್ಟ್ರೀಯ ಬ್ಯಾಂಕ್‌ ಉದ್ಯೋಗಿಗಳ ಒಕ್ಕೂಟದ (ಐಎನ್‌ಬಿಇಎಫ್‌) ರಾಜ್ಯದ ಘಟಕದ ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ ಎಂ.ಕೆ. ‘ಪ್ರಜಾವಾಣಿ’ಗೆ ತಿಳಿಸಿದರು.

‘ಬ್ಯಾಂಕ್‌ಗಳ ಖಾಸಗೀಕರಣದಿಂದಾಗಿ ದೇಶದ ಜನರ ಉಳಿತಾಯದ ಹಣದ ಲೂಟಿಗೆ ಅವಕಾಶ ಮಾಡಿಕೊಟ್ಟಂತೆ ಆಗಲಿದೆ. ಠೇವಣಿದಾರರ ಹಿತಾಸಕ್ತಿಗೆ ಧಕ್ಕೆಯಾಗಲಿದೆ. ಶಾಖೆಗಳು ಮುಚ್ಚುವ ಮತ್ತು ಜನಸಾಮಾನ್ಯರು ಬ್ಯಾಂಕಿಂಗ್‌ ಸೇವೆಗಳಿಂದ ವಂಚನೆಗೆ ಒಳಗಾಗುವ ಸಾಧ್ಯತೆಗಳು ಹೆಚ್ಚಿವೆ’ ಎಂದು ಅವರು ಹೇಳಿದರು.

ADVERTISEMENT

ಬ್ಯಾಂಕ್‌ಗಳು ರಾಷ್ಟ್ರೀಕರಣಗೊಂಡ ನಂತರ ಸರ್ಕಾರಿ ಸ್ವಾಮ್ಯದ ಯಾವುದೇ ಬ್ಯಾಂಕ್‌ ಮುಳುಗಿಲ್ಲ. ಮುಳುಗಿ ಹೋಗಿದ್ದ ಖಾಸಗಿ ಬ್ಯಾಂಕ್‌ಗಳನ್ನು ತಮ್ಮ ತೆಕ್ಕೆಗೆ ಸೇರಿಸಿಕೊಂಡು ಠೇವಣಿದಾರರ ಹಿತಾಸಕ್ತಿಗಳನ್ನು ಸರ್ಕಾರಿ ಬ್ಯಾಂಕ್‌ಗಳು ಕಾಪಾಡಿವೆ. ಇಂತಹ ಬ್ಯಾಂಕ್‌ಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವ ಮೂಲಕ ಹಣಕಾಸು ಕ್ಷೇತ್ರವನ್ನು ದೇಶಿ–ವಿದೇಶಿ ಬಂಡವಾಳಶಾಹಿಗಳಿಗೆ ಒಪ್ಪಿಸುವ ಹುನ್ನಾರ ನಡೆಯುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.