
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ
ಪಿಟಿಐ ಚಿತ್ರ
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಮುಂದಿನ 24 ಗಂಟೆಗಳ ಕಾಲ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಹವಾಮಾನ ಇಲಾಖೆ, ಅ.27 ಮತ್ತು 28ರಂದು ತಮಿಳುನಾಡು, ಕೇರಳದಲ್ಲಿ ಭಾರಿ ಮಳೆಯಲಾಗಿದೆ. ಅ.26ರಿಂದ 28ರವರೆಗೆ ಕರಾವಳಿ ಕರ್ನಾಟಕದ ಭಾಗದಲ್ಲಿ, ಅ.26ರಿಂದ 30ರವರೆಗೆ ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.
ಗಾಳಿಯು ಗಂಟೆಗೆ 10 ಕಿ.ಮೀ ವೇಗದಲ್ಲಿ ಬೀಸಲಿದ್ದು, ಅ.28ರ ಹೊತ್ತಿಗೆ ಚಂಡಮಾರುತವಾಗಿ ತಿರುಗುವ ಸಾಧ್ಯತೆಯಿದೆ. ಚಂಡಮಾರುತ ಕಾಕಿನಾಡದ ಸುತ್ತಮುತ್ತಲಿನ ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ ಆಂಧ್ರಪ್ರದೇಶದ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ಅ.26 ರಿಂದ 28ರವರೆಗೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ಈಗಾಗಲೇ ಮೀನುಗಾರಿಕೆಗೆ ತೆರಳಿರುವವರು ಬೋಟುಗಳ ಸಮೇತ ತೀರಕ್ಕೆ ವಾಪಸ್ಸಾಗುವಂತೆ ಸೂಚನೆ ನೀಡಲಾಗಿದೆ.
ಸಮುದ್ರ ಪ್ರಕ್ಷುಬ್ಧವಾಗುವ ಸಂಭವ ಇರುವುದರಿಂದ ತಮಿಳುನಾಡಿನ ಕರಾವಳಿ ನಿವಾಸಿಗಳಿಗೆ ಜಾಗರೂಕರಾಗಿರುವಂತೆ ಸೂಚಿಸಲಾಗಿದ್ದು, ಮುಂಜಾಗೃತಾ ಕ್ರಮವಾಗಿ ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜಿಸಲಾಗಿದೆ. ತಗ್ಗು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇರುವ ಕಾರಣ ಸ್ಥಳೀಯ ಆಡಳಿತ ಪೂರ್ವ ಸಿದ್ಧತಾ ಕ್ರಮಗಳನ್ನು ಆರಂಭಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.