ADVERTISEMENT

ಮಮತಾ ಬ್ಯಾನರ್ಜಿ ವಿರುದ್ಧ ಹೇಳಿಕೆ:ಪಶ್ಚಿಮ ಬಂಗಾಳ ಕಾಂಗ್ರೆಸ್ ವಕ್ತಾರ ಬಂಧನ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2023, 7:39 IST
Last Updated 4 ಮಾರ್ಚ್ 2023, 7:39 IST
   

ಕೋಲ್ಕತ್ತ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ವಕ್ತಾರ ಕೌಸ್ತವ್ ಬಾಗ್ಚಿ ಅವರನ್ನು ಶನಿವಾರ ಬೆಳಗ್ಗೆ ಅವರ ನಿವಾಸದಿಂದ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಗರದ ಬುರ್ಟೊಲ್ಲಾ ಪೊಲೀಸ್ ಠಾಣೆಯ ಬೃಹತ್ ತಂಡವು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಬರಾಕ್‌ಪೋರ್‌ನಲ್ಲಿರುವ ಬಾಗ್ಚಿ ಅವರ ನಿವಾಸದ ಮೇಲೆ ಮುಂಜಾನೆ 3.30ರ ಸುಮಾರಿಗೆ ದಾಳಿ ನಡೆಸಿ ಅವರನ್ನು ಬಂಧಿಸಿದೆ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಶುಕ್ರವಾರ ಬಾಗ್ಚಿ ವಿರುದ್ಧ ಬುರ್ಟೊಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ADVERTISEMENT

‘ನಾವು ಕೌಸ್ತವ್ ಬಾಗ್ಚಿಯನ್ನು ಬ್ಯಾರಕ್‌ಪೋರ್‌ನಲ್ಲಿರುವ ಅವರ ನಿವಾಸದಿಂದ ಬಂಧಿಸಿದ್ದೇವೆ. ಆ ಕುರಿತಂತೆ ಈಗ ಹೆಚ್ಚು ಮಾತನಾಡಲು ಸಾಧ್ಯವಿಲ್ಲ. ನಮ್ಮ ಅಧಿಕಾರಿಗಳು ಅವರೊಂದಿಗೆ ಮಾತನಾಡುತ್ತಿದ್ದಾರೆ’ ಎಂದು ಅಧಿಕಾರಿ ತಿಳಿಸಿದ್ದಾರೆ.

ಸಾಗರ್ದಿಘಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ನಂತರ ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರ ವಿರುದ್ಧ ವೈಯಕ್ತಿಕ ದಾಳಿ ಮಾಡಿದ್ದ ಸಿಎಂ ಅವರನ್ನು ಬಾಗ್ಚಿ ಟೀಕಿಸಿದ್ದರು.

ಬಂಧನದ ನಂತರ ಬಾಗ್ಚಿಯನ್ನು ಬುರ್ಟೊಲ್ಲಾ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹೊರಗೆ ಪ್ರತಿಭಟನೆ ನಡೆಸಿದ್ದಾರೆ.

ಬಾಗ್ಚಿ ವಿರುದ್ಧ ಐಪಿಸಿ ಸೆಕ್ಷನ್ 120(ಬಿ) (ಕ್ರಿಮಿನಲ್ ಪಿತೂರಿ), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 506 (ಬೆದರಿಕೆ) ಮತ್ತು ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.