
ಕೋಲ್ಕತ್ತ (ಪಿಟಿಐ): ಪಶ್ಚಿಮ ಬಂಗಾಳದ ಆನಂದಪುರದಲ್ಲಿ, ಜ.26ರಂದು ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಗುರುವಾರ 13 ಮೃತದೇಹಗಳನ್ನು ಪತ್ತೆ ಹಚ್ಚಲಾಗಿದ್ದು, ಇನ್ನೂ 28 ಮಂದಿ ಕಾಣೆಯಾಗಿದ್ದಾರೆ. ಮೃತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ಗುರುವಾರ ತಿಳಿಸಿದರು.
ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಹಾಗೂ ಇತರ ಬಿಜೆಪಿ ಮುಖಂಡರ ಉದ್ದೇಶಿತ ಭೇಟಿಗೆ ಮುಂಚಿತವಾಗಿ, ಘಟನೆ ನಡೆದ ಸ್ಥಳದಲ್ಲಿ ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಹೇರಲಾಗಿದ್ದು, ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಬೆಂಕಿ ಅವಘಡದಲ್ಲಿ ಎರಡು ಗೋದಾಮುಗಳು ಹಾಗೂ ಒಂದು ಮೊಮೊ ಉತ್ಪಾದನಾ ಘಟಕ ನಾಶವಾಗಿವೆ. ಮೃತದೇಹಗಳು ಸುಟ್ಟು ಕರಕಲಾಗಿರುವುದರಿಂದ ಡಿಎನ್ಎ ಪರೀಕ್ಷೆ ನಡೆಸಿ, ಗುರುತು ಪತ್ತೆಹಚ್ಚಿದ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.
‘ಘಟನೆಯ ಸ್ವರೂಪ ಮತ್ತು ಹಾನಿಯ ಪ್ರಮಾಣವನ್ನು ಗಮನಿಸಿದರೆ ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹಾಗೂ ರಕ್ಷಣಾ ಕಾರ್ಯಾಚರಣೆಗೆ ಅನುಕೂಲವಾಗಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.