
ನವದೆಹಲಿ: ತಿರುಪರನ್ಕುಂದ್ರಂ ದೇವಾಲಯವನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಸುಪರ್ದಿಗೆ ನೀಡಬೇಕು ಹಾಗೂ ಬೆಟ್ಟದ ಮೇಲಿರುವ ದೀಪಸ್ತಂಭದಲ್ಲಿ ನಿತ್ಯವೂ ದೀಪ ಬೆಳಗಿಸಲು ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ತಮಿಳುನಾಡು ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ.
ಹಿಂದೂ ಧರ್ಮ ಪರಿಷತ್ನಿಂದ ಸಲ್ಲಿಕೆಯಾಗಿರುವ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಹಾಗೂ ವಿಪುಲ್ ಎಂ. ಪಾಂಚೋಲಿ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿದೆ. ದೇವಸ್ಥಾನದ ಸುಪರ್ದಿ ಮಾತ್ರವಲ್ಲದೇ ಪ್ರತೀವರ್ಷ ಕಾರ್ತಿಕ ಮಾಸದಲ್ಲಿ ಬೆಟ್ಟದ ಪೂರ್ತಿ ದೀಪ ಬೆಳಗಿಸಲು, ಭಕ್ತರು ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕೆಂದೂ ಅರ್ಜಿಯಲ್ಲಿ ಕೋರಲಾಗಿದೆ.
ವಿಚಾರಣೆ ವೇಳೆ, ಬೆಟ್ಟದ ಮೇಲಿರುವ ದೀಪ ಸ್ತಂಭದಲ್ಲಿ ದೀಪ ಬೆಳಗಲು ಏಕಸದಸ್ಯ ಪೀಠ ನೀಡಿದ್ದ ತೀರ್ಪನ್ನು ಮದ್ರಾಸ್ ಹೈಕೋರ್ಟ್ನ ಮದುರೆ ಪೀಠವು ಜನವರಿ 6ರಂದು ಎತ್ತಿ ಹಿಡಿದಿದೆ ಎಂಬುದನ್ನೂ ನ್ಯಾಯಪೀಠದ ಗಮನಕ್ಕೆ ತರಲಾಗಿದೆ. ಆ ಬಳಿಕ ನ್ಯಾಯಪೀಠವು ಅರ್ಜಿ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿ ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಎಎಸ್ಐ ಹಾಗೂ ಇತರರಿಗೆ ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.