ನವದೆಹಲಿ: ಕೃಷಿ ಕಾಯ್ದೆಗಳ ರದ್ಧತಿಗೆ ಆಗ್ರಹಿಸಿ ವಿವಿಧ ರೈತ ಸಂಘಟನೆಗಳು ಸೋಮವಾರ ‘ಭಾರತ್ ಬಂದ್‘ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳಿಗಾಗಿ ದೆಹಲಿಯ ಗಡಿಭಾಗ ಟಿಕ್ರಿ ಸಮೀಪದ ಪಂಡಿತ್ ಶ್ರೀ ರಾಮ್ ಶರ್ಮ ಮೆಟ್ರೊ ನಿಲ್ದಾಣವನ್ನು ಬಂದ್ ಮಾಡಲಾಗಿದೆ.
ಭದ್ರತೆಯ ದೃಷ್ಟಿಯಿಂದ ಹರಿಯಾಣದ ‘ಹಸಿರು ಮಾರ್ಗ‘ದಲ್ಲಿರುವಪಂಡಿತ್ ಶ್ರೀ ರಾಮ್ ಶರ್ಮಾ ಮೆಟ್ರೊ ನಿಲ್ದಾಣದ ‘ಪ್ರವೇಶ ಮತ್ತು ನಿರ್ಗಮನ ದ್ವಾರ‘ವನ್ನು ಮುಚ್ಚಲಾಗಿದೆ ಎಂದು ದೆಹಲಿ ಮೆಟ್ರೊ ರೈಲ್ವೆ ಕೇಂದ್ರ ಟ್ವೀಟ್ ಮಾಡಿದೆ. ಈ ಹಸಿರು ಮಾರ್ಗ ದೆಹಲಿಯ ಕೀರ್ತಿ ನಗರ್ ಸ್ಟೇಷನ್ ಮತ್ತು ಹರಿಯಾಣದ ಬ್ರಿಗ್ ಹೋಶಿಯಾರ್ ಸಿಂಗ್ ಸ್ಟೇಷನ್ ನಡುವೆ ಸಂಪರ್ಕ ಕಲ್ಪಿಸುತ್ತದೆ.
ರೈತ ಸಂಘಟನೆಗಳು ಭಾರತ್ ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯ ಗಡಿ ಭಾಗದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ.
ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ 40ಕ್ಕೂ ಹೆಚ್ಚು ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಭಾರತ್ ಬಂದ್ಗೆ ಕರೆ ನೀಡಿದೆ.
ದೆಹಲಿಯಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ ಸೇರಿದಂತೆ ಉತ್ತರ ಭಾರತದ ವಿವಿಧ ರಾಜ್ಯಗಳ ರೈತರು ಪಾಲ್ಗೊಳ್ಳುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.