ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಖರ್ಗೆ ಅವರ ನವದೆಹಲಿ ನಿವಾಸದಲ್ಲಿ ಭೇಟಿಯಾಗಿ ಕೆಲಹೊತ್ತು ಮಾತುಕತೆ ನಡೆಸಿದರು.
ಕೇವಲ 15 ದಿನಗಳಲ್ಲಿ ನಿತೀಶ್ ಕುಮಾರ್ ಅವರು ಎರಡನೇ ಬಾರಿಗೆ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾಗಿದ್ದು, ಮುಂದಿನ ಲೋಕಸಭಾ ಚುನಾವಣೆಗೆ ವಿರೋಧ ಪಕ್ಷಗಳ ಒಗ್ಗೂಡಿಸುವ ಸಲುವಾಗಿ ಈ ಭೇಟಿ ಎನ್ನಲಾಗಿದೆ.
ನಿತೀಶ್ ಕುಮಾರ್ ಅವರು 2024 ರ ಲೋಕಸಭಾ ಚುನಾವಣೆಗೆ ವಿಪಕ್ಷಗಳನ್ನು ಒಗ್ಗೂಡಿಸಲು ಶ್ರಮಿಸುತ್ತಿದ್ದು ಈಗಾಗಲೇ ಅವರು ಒಡಿಶಾ ಸಿಎಂ ನವೀನ್ ಪಟ್ನಾಯಕ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಶಿವಸೇನಾದ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿ ನಡೆದ ಸಿದ್ದರಾಮಯ್ಯ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್, ಮೆಹಬೂಬಾ ಮುಫ್ತಿ, ಶರದ್ ಪವಾರ್ ಅವರನ್ನು ಭೇಟಿಯಾಗಿದ್ದಾರೆ. ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ಭೇಟಿಯ ಮಾತುಕತೆಗಳು ಇನ್ನೂ ಮಾಧ್ಯಮಗಳಿಗೆ ಲಭ್ಯವಾಗಿಲ್ಲ.
ಈ ಭೇಟಿಯಲ್ಲಿ ಜೆಡಿಯು ಅಧ್ಯಕ್ಷ ಲಲನ್ ಸಿಂಗ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಕೂಡ ಹಾಜರಿದ್ದರು. ಕರ್ನಾಟಕ ಚುನಾವಣಾ ಫಲಿತಾಂಶದ ನಂತರ ಪಟ್ನಾದಲ್ಲಿ ವಿಪಕ್ಷ ನಾಯಕರ ಸಭೆ ಆಯೋಜಿಸುವುದಾಗಿ ನಿತೀಶ್ ಕುಮಾರ್ ಈ ಹಿಂದೆ ಹೇಳಿದ್ದರು.
ಕಳೆದ ಬುಧವಾರ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರನ್ನು ನಿತೀಶ್ ಕುಮಾರ್ ಭೇಟಿಯಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.