
ನಿತೀಶ್ ಕುಮಾರ್
(ಪಿಟಿಐ ಚಿತ್ರ)
ಪಟ್ನಾ: ಪಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆಯಲಿರುವ ನೂತನ ಸರ್ಕಾರದ ಪ್ರಮಾಣವಚನ ಕಾರ್ಯಕ್ರಮ ಸಿದ್ಧತೆಗಳನ್ನು ಮುಖ್ಯಮಂತ್ರಿ ನಿತೀಶ್ಕುಮಾರ್ ಅವರು ಮಂಗಳವಾರ ಪರಿಶೀಲಿಸಿದರು.
ದಾಖಲೆಯ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ನಿತೀಶ್ ಅವರೊಂದಿಗೆ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಮತ್ತು ಮುಖ್ಯ ಕಾರ್ಯದರ್ಶಿ ಪ್ರತ್ಯಯ ಅಮೃತ್ ಅವರಿದ್ದರು.
ರಾಜ್ಯ ರಾಜಧಾನಿ ಮತ್ತು ಗಾಂಧಿ ಮೈದಾನದಲ್ಲಿ ಬೃಹತ್ ಪ್ರಮಾಣದಲ್ಲಿ ಭದ್ರತಾ ಸಿಬ್ಬಂದಿ ನಿಯೋಜನೆಗೊಂಡಿದ್ದಾರೆ. ಗಾಂಧಿ ಮೈದಾನಕ್ಕೆ ಗುರುವಾರದವರೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಇಂದು ನಿತೀಶ್ ರಾಜೀನಾಮೆ:
ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬುಧವಾರ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಸಲ್ಲಿಸಲಿದ್ದಾರೆ. ಇದೇ ದಿನ ಬಿಹಾರದ 17ನೇ ವಿಧಾನಸಭೆಯು ವಿಸರ್ಜನೆಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
ಜೆಡಿಯು ಮತ್ತು ಬಿಜೆಪಿ ಬುಧವಾರ ತಮ್ಮ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡಲಿವೆ ಎಂದು ಹೇಳಿವೆ.
ಸ್ಪೀಕರ್ ಸ್ಥಾನಕ್ಕೆ ಲಾಭಿ
ಸಚಿವ ಸ್ಥಾನ ಮತ್ತು ಸ್ಪೀಕರ್ ಸ್ಥಾನದ ಬಗ್ಗೆ ಎನ್ಡಿಎ ಮಿತ್ರಪಕ್ಷಗಳಲ್ಲಿ ಭಾರಿ ಲಾಬಿ ನಡೆಯುತ್ತಿದೆ. ಬಿಜೆಪಿ ಮತ್ತು ಜೆಡಿಯು ಪಕ್ಷಗಳೆರಡೂ ಸ್ಪೀಕರ್ ಸ್ಥಾನಕ್ಕೆ ಪಟ್ಟು ಹಿಡಿದಿವೆ ಎಂದು ಮೂಲಗಳು ತಿಳಿಸಿವೆ. ಜೆಡಿಯುನ ವಿಜಯ್ ಚೌಧರಿ ಮತ್ತು ಬಿಜೆಪಿಯ ಪ್ರೇಮ್ ಕುಮಾರ್ ಸ್ಪೀಕರ್ ಹುದ್ದೆಯ ಆಕಾಂಕ್ಷಿಗಳಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.