ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್
ಲಖನೌ: ‘ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಬಿಹಾರಕ್ಕೆ ತೆರಳುತ್ತಿಲ್ಲ, ‘ಸ್ಟಾರ್ ವಿಭಜಕ’ರಾಗಿ ಹೋಗುತ್ತಿದ್ದಾರೆ. ಕೋಮುವಾದಿಗಳನ್ನು ಜನರು ಸ್ವೀಕರಿಸುವುದಿಲ್ಲ’ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಶನಿವಾರ ವಾಗ್ದಾಳಿ ನಡೆಸಿದರು.
‘ಬಿಜೆಪಿಯು ‘ಒಡೆದು ಆಳುವ ನೀತಿ’ಯನ್ನು ಅನುಸರಿಸುತ್ತಿದೆ. ಏಕೆಂದರೆ ಅದು ಹಿಂದುಳಿದ ವರ್ಗಗಳು, ದಲಿತರು ಮತ್ತು ಅಲ್ಪಸಂಖ್ಯಾತರಿಗೆ ಹೆದರುತ್ತಿದೆ’ ಎಂದು ಆರೋಪಿಸಿದರು.
‘ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಮುಖ್ಯಮಂತ್ರಿ ಮಟ್ಟದಲ್ಲಿ ಲೆಕ್ಕವಿಲ್ಲದಷ್ಟು ಸಭೆಗಳು ನಡೆದವು. ಆದರೂ ನಗರವು ಸಂಚಾರದಟ್ಟಣೆಯಲ್ಲಿ ಸಿಲುಕಿದೆ. ಸ್ಮಾರ್ಟ್ ಸಿಟಿ ನಿರ್ಮಾಣಕ್ಕೆ ಮೀಸಲಿಟ್ಟ ಹಣವೆಲ್ಲ ಎಲ್ಲಿ ಹೋಯಿತು? ಯಾವುದೇ ನಗರಕ್ಕೆ ತೆರಳಿ ಅಲ್ಲಿ ಸಂಚಾರ ದಟ್ಟಣೆ ಮಾಮೂಲಿಯಂತಾಗಿದೆ’ ಎಂದು ಟೀಕಿಸಿದರು.
ಉತ್ತರ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳ ಹೆಸರಿನಲ್ಲಿ ಹಗರಣ ನಡೆದಿದೆ ಎಂದು ಯೋಗಿ ವಿರುದ್ಧ ಅಖಿಲೇಶ್ ಗುಡುಗಿದ್ದಾರೆ.
ಬಿಹಾರ ವಿಧಾನಸಭೆಯ 243 ಸ್ಥಾನಗಳ ಪೈಕಿ ತಲಾ 101 ಸ್ಥಾನಗಳಲ್ಲಿ ಬಿಜೆಪಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಸ್ಪರ್ಧಿಸಲಿವೆ. ಇನ್ನುಳಿದ ಸ್ಥಾನಗಳನ್ನು ಇತರೆ ಸಣ್ಣ ಮೈತ್ರಿ ಪಕ್ಷಗಳಿಗೆ ಹಂಚಿಕೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.