ವಿರೋಧ ಪಕ್ಷಗಳ ಸಂಸದರ ಪ್ರತಿಭಟನೆ
– ಪಿಟಿಐ ಚಿತ್ರ
ನವದೆಹಲಿ: ಬಿಹಾರದಲ್ಲಿ ಚುನಾವಣಾ ಆಯೋಗದ ಮತದಾರರ ಪಟ್ಟಿ ಪರಿಷ್ಕರಣೆಯ ವಿರುದ್ಧ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಇಂಡಿಯಾ ಒಕ್ಕೂಟ ಪಕ್ಷಗಳ ಹಲವಾರು ಸಂಸದರು ಗುರುವಾರ ಸಂಸತ್ ಭವನದ ಸಂಕೀರ್ಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಹಿಂಪಡೆಯಬೇಕು, ಉಭಯ ಸದನಗಳಲ್ಲಿ ಈ ಬಗ್ಗೆ ಚರ್ಚೆಗೆ ಅವಕಾಶ ಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ದಿನದ ಕಲಾಪ ಪ್ರಾರಂಭವಾಗುವ ಮೊದಲು, ಕಾಂಗ್ರೆಸ್, ಡಿಎಂಕೆ, ಟಿಎಂಸಿ, ಸಮಾಜವಾದಿ ಪಕ್ಷ, ಜೆಎಂಎಂ, ಆರ್ಜೆಡಿ ಮತ್ತು ಎಡ ಪಕ್ಷಗಳ ಉನ್ನತ ನಾಯಕರು ಮತ್ತು ವಿರೋಧ ಪಕ್ಷದ ಸಂಸದರು ಸಂಸತ್ತಿನ ಮಕರ ದ್ವಾರದ ಬಳಿ ಜಮಾಯಿಸಿ ಸರ್ಕಾರ ಮತ್ತು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರುದ್ಧ ಘೋಷಣೆಗಳನ್ನು ಕೂಗಿದರು.
ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಕೆ.ಸಿ ವೇಣುಗೋಪಾಲ್, ಸಮಾಜವಾದಿ ಪಕ್ಷದ ಜಿಯಾವುರ್ ರೆಹಮಾನ್ ಬರ್ಕ್, ಟಿಎಂಸಿಯ ಕೀರ್ತಿ ಆಜಾದ್, ಡಿಎಂಕೆಯ ಎ. ರಾಜಾ ಸೇರಿದಂತೆ ಪ್ರಮುಖ ನಾಯಕರು, ‘ಪ್ರಜಾಪ್ರಭುತ್ವವನ್ನು ಉಳಿಸಿ’ ಸೇರಿ ಹಲವು ಘೋಷಣೆಗಳನ್ನು ಕೂಗಿದರು.
ಈ ಪ್ರತಿಭಟನೆ ಸತತ ಮೂರು ದಿನಗಳಿಂದ ನಡೆಯುತ್ತಿದೆ.
ವಿಧಾನಸಭಾ ಚುನಾವಣೆಗೆ ಮುನ್ನ ಬಿಹಾರದಲ್ಲಿ ಮತದಾರರನ್ನು ವಂಚಿಸುವ ಗುರಿಯನ್ನು ಚುನಾವಣಾ ಆಯೋಗ ಹೊಂದಿದೆ ಎಂದು ಆರೋಪಿಸಿ, ವಿರೋಧ ಪಕ್ಷಗಳು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ವಿರುದ್ಧ ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.