ಗುವಾಹಟಿ: ಬಿಜೆಪಿ ಪಕ್ಷವನ್ನು ದೇಶದ ಎಲ್ಲಾ ರಾಜ್ಯಗಳಲ್ಲೂ ಮಾತ್ರವಲ್ಲದೆ ನೆರೆಯ ರಾಷ್ಟ್ರಗಳಲ್ಲೂ ಸಂಘಟಿಸುವ ಯೋಜನೆ ಇದೆ ಎಂದು ತ್ರಿಪುರದ ಬಿಜೆಪಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಹೇಳಿದ್ದಾರೆ.
ಅಗರ್ತಲಾದಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪಕ್ಷವನ್ನು ದೇಶಾದ್ಯಂತ ಮಾತ್ರವಲ್ಲದೆ, ನೆರೆಯ ರಾಷ್ಟ್ರಗಳಲ್ಲೂ ವಿಸ್ತರಿಸುವ ಯೋಜನೆ ಇದೆ ಎಂಬಅವರಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ಗೃಹ ಸಚಿವ ಅಮಿತ್ ಶಾ ಅವರು ನೇಪಾಳ ಮತ್ತು ಶ್ರೀಲಂಕಾದಲ್ಲಿ ಬಿಜೆಪಿ ಸರ್ಕಾರ ಸ್ಥಾಪಿಸುವ ಯೋಜನೆ ಹೊಂದಿದ್ದಾರೆ ಎಂದು ಬಿಪ್ಲಬ್ ದೇಬ್ ಹೇಳಿದ್ದಾರೆ.
2018ರಲ್ಲಿ ತ್ರಿಪುರಾ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಆಗ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಮಿತ್ ಶಾ ಅವರು ಭಾರತದ ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ಗೆದ್ದು ಬಂದ ಬಳಿಕ ವಿದೇಶಗಳಲ್ಲೂ ಪಕ್ಷವನ್ನು ವಿಸ್ತರಿಸುವ ಬಗ್ಗೆ ನಮ್ಮೊಂದಿಗೆ ಮಾತನಾಡಿದ್ದರು ಎಂದು ಬಿಪ್ಲಬ್ ದೇಬ್ ಹೇಳಿದ್ದಾರೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಇಲ್ಲಿನ ಅತಿಥಿ ಗೃಹದಲ್ಲಿ ಅಜಯ್ ಜಮ್ವಾಲ್ (ಬಿಜೆಪಿಯ ಈಶಾನ್ಯ ವಲಯ ಕಾರ್ಯದರ್ಶಿ) ಅವರು ಬಿಜೆಪಿ ಹಲವು ರಾಜ್ಯಗಳಲ್ಲಿ ಸರ್ಕಾರ ರಚಿಸಿದೆ ಎಂದು ಹೇಳಿದ್ದರು. ಇದಕ್ಕೆ ಉತ್ತರವಾಗಿ ಅಮಿತ್ ಶಾ ಅವರು, ಶ್ರೀಲಂಕಾ ಮತ್ತು ನೇಪಾಳ ರಾಷ್ಟ್ರಗಳಲ್ಲೂ ನಾವು ಅಧಿಕಾರ ಹೊಂದಬೇಕು ಎಂದು ಹೇಳಿದ್ದರು ಎಂದು ಬಿಪ್ಲಬ್ ಹೇಳಿದ್ದಾರೆ.
ಬಿಜೆಪಿ ಸೇರಿದಂತೆ ಇತರೆ ರಾಜಕೀಯ ಪಕ್ಷಗಳು ಬಿಪ್ಲಬ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.