ADVERTISEMENT

ಬಿರ್‌ಭೂಮ್ ಹಿಂಸಾಚಾರ: ಮೃತರ ಕುಟುಂಬಗಳಿಗೆ ನೌಕರಿ ನೀಡಿದ ಸಿಎಂ ಮಮತಾ

ಪಿಟಿಐ
Published 5 ಏಪ್ರಿಲ್ 2022, 4:42 IST
Last Updated 5 ಏಪ್ರಿಲ್ 2022, 4:42 IST
ಬೋಗ್‌ತುಇ ಗ್ರಾಮದಲ್ಲಿ ಮೃತರ ಕುಟುಂಬಗಳ ಸದಸ್ಯರೊಂದಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಾತುಕತೆ ನಡೆಸಿದರು –ಪಿಟಿಐ ಚಿತ್ರ
ಬೋಗ್‌ತುಇ ಗ್ರಾಮದಲ್ಲಿ ಮೃತರ ಕುಟುಂಬಗಳ ಸದಸ್ಯರೊಂದಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಾತುಕತೆ ನಡೆಸಿದರು –ಪಿಟಿಐ ಚಿತ್ರ   

ಬಿರ್‌ಭೂಮ್:ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿರ್‌ಭೂಮ್ ಹಿಂಸಾಚಾರ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೌಕರಿ ಪ್ರಮಾಣ ಪತ್ರಗಳನ್ನು ಸೋಮವಾರ ವಿತರಿಸಿದ್ದಾರೆ.

ಘಟನೆಯಲ್ಲಿ ಮೃತಪಟ್ಟಿದ್ದ 10 ಜನರ ಕುಟುಂಬಗಳಲ್ಲಿನ ತಲಾ ಒಬ್ಬರಿಗೆ ಸರ್ಕಾರಿ ನೌಕರಿಯನ್ನು ಪಶ್ಚಿಮ ಬಂಗಾಳ ಸರ್ಕಾರ ನೀಡಿದೆ.

ಮಾರ್ಚ್‌ 22ರಂದು ಬಿರ್‌ಭೂಮ್ ಜಿಲ್ಲೆಯ ರಾಮ್‌ಪುರಹಾಟ್‌ನ ಟಿಎಂಸಿ ಪಂಚಾಯಿತಿ ಸದಸ್ಯನ ಹತ್ಯೆ ನಡೆದಿತ್ತು. ಅದರ ಬೆನ್ನಲ್ಲೇ ಪಕ್ಕದ ಬೋಗ್‌ತುಇ ಗ್ರಾಮದಲ್ಲಿ ಹತ್ತಕ್ಕೂ ಹೆಚ್ಚು ಮನೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಕೃತ್ಯದಲ್ಲಿ 9 ಜನರು ಜೀವಂತವಾಗಿ ಸುಟ್ಟುಹಾಕಲಾಗಿತ್ತು. ಗಾಯಗೊಂಡಿದ್ದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ವರದಿಯಾಗಿತ್ತು.

ADVERTISEMENT

ಕಲ್ಕತ್ತ ಹೈಕೋರ್ಟ್‌ನ ಆದೇಶದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣದ ತನಿಖೆ ನಡೆಸುತ್ತಿದೆ. ಪಶ್ಚಿಮ ಬಂಗಾಳ ಸರ್ಕಾರ ರಚಿಸಿದ್ದ ಎಸ್‌ಐಟಿ ಈ ಹಿಂದೆ ಪ್ರಕರಣದ ತನಿಖೆ ನಡೆಸುತ್ತಿತ್ತು.

ಇನ್ನೊಂದೆಡೆ ಬಿರ್‌ಭೂಮ್‌ನಲ್ಲಿನ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಸತ್ಯಶೋಧನಾ ಸಮಿತಿಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಸಲ್ಲಿಸಿರುವ ವರದಿಯಿಂದ ಸಿಬಿಐ ತನಿಖೆಗೆ ಅಡ್ಡಿಯಾಗುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.