ಭುವನೇಶ್ವರ: ರಾಜ್ಯಸಭೆಉಪ ಸಭಾಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಯನ್ನು ಬೆಂಬಲಿಸಲು ಮುಂದಾಗಿರುವ ಬಿಜು ಜನತಾ ದಳ (ಬಿಜೆಡಿ) ನಡೆಯನ್ನು ಕಾಂಗ್ರೆಸ್ ಟೀಕಿಸಿದ್ದು, ಪ್ರಾದೇಶಿಕ ಪಕ್ಷದ ನೈಜ ಬಣ್ಣವನ್ನು ಬಯಲು ಮಾಡಿದೆ ಎಂದು ಹೇಳಿದೆ.
ಎನ್ಡಿಎ ಅಭ್ಯರ್ಥಿ ಹರಿವಂಶ ನಾರಾಯಣ ಸಿಂಗ್ ಅವರಿಗೆ ಬೆಂಬಲ ನೀಡುವಂತೆ ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರು ಬಿಜೆಡಿ ಅಧ್ಯಕ್ಷ ನವೀನ್ ಪಟ್ನಾಯಕ್ ಅವರನ್ನು ಇದೇ 10ರಂದು ಮನವೊಲಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಂಬಲ ಸೂಚಿಸಲು ಪಟ್ನಾಯಕ್ ನಿರ್ಧರಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿತ್ತು.
‘ರಾಷ್ಟ್ರೀಯ ಪಕ್ಷಗಳಿಂದ ಸಮಾನ ಅಂತರ ಕಾಯ್ದುಕೊಳ್ಳುವುದಾಗಿ ಹೇಳುವ ಬಿಜೆಡಿ ಎಲ್ಲ ವಿಷಯಗಳಲ್ಲೂಬಿಜೆಪಿಯನ್ನು ಬೆಂಬಲಿಸುತ್ತಿದೆ. ಈ ಮೂಲಕ ಒಡಿಶಾ ಜನತೆಯ ದಿಕ್ಕು ತಪ್ಪಿಸುತ್ತಿದೆ. ಎರಡೂ ಪಕ್ಷಗಳಲ್ಲಿ ಯಾವುದೇ ವ್ಯತ್ಯಾಸ ಇಲ್ಲ’ ಎಂದು ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಿರಂಜನ್ ಪಟ್ನಾಯಕ್ ವ್ಯಂಗ್ಯವಾಡಿದ್ದಾರೆ.
ಒಡಿಶಾದ 10 ರಾಜ್ಯಸಭಾ ಸದಸ್ಯರ ಪೈಕಿ ಒಂಬತ್ತು ಮಂದಿ ಬಿಜೆಡಿಯವರೇ ಇದ್ದಾರೆ.2018ರ ಉಪಸಭಾಪತಿ ಚುನಾವಣೆಯಲ್ಲೂ ಬಿಜೆಡಿಯು ಹರಿವಂಶ್ ಅವರನ್ನು ಬೆಂಬಲಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.