ADVERTISEMENT

ಭವಾನಿಪುರ ಉಪಚುನಾವಣೆ: ಬಿಜೆಪಿಯ ಪ್ರಿಯಾಂಕಾ ಟಿಬ್ರೆವಾಲ್ ನಾಮಪತ್ರ ಸಲ್ಲಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಸೆಪ್ಟೆಂಬರ್ 2021, 8:14 IST
Last Updated 13 ಸೆಪ್ಟೆಂಬರ್ 2021, 8:14 IST
ಪ್ರಿಯಾಂಕಾ ಟಿಬ್ರೆವಾಲ್
ಪ್ರಿಯಾಂಕಾ ಟಿಬ್ರೆವಾಲ್   

ಕೋಲ್ಕತ್ತ: ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭೆ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸುತ್ತಿರುವ ಬಿಜೆಪಿಯ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಟಿಬ್ರೆವಾಲ್, 'ಇದು ಅನ್ಯಾಯದ ವಿರುದ್ಧದ ಹೋರಾಟ. ಪಶ್ಚಿಮ ಬಂಗಾಳದ ಜನರ ನ್ಯಾಯಕ್ಕಾಗಿ ಹೋರಾಟ' ಎಂದು ಹೇಳಿದ್ದಾರೆ.

'ಭವಾನಿಪುರದ ಜನರಿಗೆ ಲಭಿಸಿರುವ ದೊಡ್ಡ ಅವಕಾಶ ಇದಾಗಿದೆ. ಜನರು ಮುಂದೆ ಬಿಜೆಪಿಯನ್ನು ಗೆಲ್ಲಿಸಿ ಇತಿಹಾಸ ರಚಿಸಬೇಕು' ಎಂದು ಕರೆ ನೀಡಿದ್ದಾರೆ.

ಭವಾನಿಪುರ ಉಪಚುನಾವಣೆಯು ಸೆಪ್ಟೆಂಬರ್ 30ರಂದು ನಡೆಯಲಿದ್ದು, ಅಕ್ಟೋಬರ್ 3ರಂದು ಫಲಿತಾಂಶ ಹೊರಬೀಳಲಿದೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ, ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಅಲ್ಪ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಆದರೂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಈ ಕ್ಷೇತ್ರದಲ್ಲಿ ಗೆಲುವು ದಾಖಲಿಸುವುದು ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಉಪಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ.

2011 ಹಾಗೂ 2016ರ ವಿಧಾನಸಭೆ ಚುನಾವಣೆಗಳಲ್ಲಿ ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸಿ ಮಮತಾ ಗೆಲುವು ದಾಖಲಿಸಿದ್ದರು. ಉಪಚುನಾವಣೆಯಲ್ಲಿ ಮಮತಾ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ.

ಭವಾನಿಪುರದಿಂದ ಗೆದ್ದಿರುವ ಟಿಎಂಸಿ ಶಾಸಕ ಸೋಮದೇವ್ ಚಟ್ಟೋಪಾಧ್ಯಾಯ ಅವರು ಮಮತಾ ಅವರಿಗೆ ಅನುಕೂಲವಾಗಲೆಂದೇ ಕ್ಷೇತ್ರವನ್ನು ತೊರೆದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.