ಬನೂತಿ (ಶಿಮ್ಲಾ) (ಪಿಟಿಐ):ಬಿಜೆಪಿ, ಸುಳ್ಳುಗಳ ಮೂಲಕ ದೇಶದಾದ್ಯಂತ ಜನರನ್ನು ಮೂರ್ಖರನ್ನಾಗಿ ಮಾಡಿರಬಹುದು. ಆದರೆ ಹಿಮಾಚಲ ಪ್ರದೇಶದಲ್ಲಿ ಅದು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬನೂತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿ ಭಾಗಿಯಾದ ಅವರು, ‘ಇಲ್ಲಿನ ಜನರು ಶಿಕ್ಷಿತರು, ಎಲ್ಲವನ್ನೂ ಅಳೆದು ತೂಗಿ ಮತ ಚಲಾಯಿಸುತ್ತಾರೆ. 15 ಲಕ್ಷ ಉದ್ಯೋಗ ಸೃಷ್ಟಿ, ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ಎಂಬ ಸುಳ್ಳುಗಳ ಮೂಲಕಬಿಜೆಪಿ ದೇಶದಾದ್ಯಂತ ಜನರನ್ನು ಮೂರ್ಖರನ್ನಾಗಿ ಮಾಡಿರಬಹುದು. ಆದರೆ ಇಲ್ಲಿ ಅದು ಸಾಧ್ಯವಿಲ್ಲ’ ಎಂದು ಹೇಳಿದರು.
‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಪ್ರಣಾಳಿಕೆಯಲ್ಲಿರುವ ಎಲ್ಲಾ ಭರವಸೆಗಳನ್ನೂ ಈಡೇರಿಸಲಿದೆ ಮತ್ತು ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿ ಮಾಡಲಿದೆ’ ಎಂದು ತಿಳಿಸಿದರು.
‘ನಾನು ಕಾಂಗ್ರೆಸ್ ಅಧ್ಯಕ್ಷನಾಗಿ ಚುನಾಯಿತನಾಗಿದ್ದೇನೆ. ಚುನಾವಣೆ ಹೇಗೆ ನಡೆಯಿತು ಎಂಬುದು ಪ್ರತಿಯೊಬ್ಬರಿಗೂ ಗೊತ್ತು. ಆದರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಡಿ.ನಡ್ಡಾ ಅವರ ಆಯ್ಕೆ ಹೇಗೆ ನಡೆಯಿತು ಎಂಬುದು ಯಾರಿಗೂ ಗೊತ್ತಿಲ್ಲ’ ಎನ್ನುವ ಮೂಲಕ ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿ ಇಲ್ಲ ಎಂದು ಆರೋಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.