
ಕಾಂಗ್ರೆಸ್ ಹಾಗೂ ಬಿಜೆಪಿ ಭಾವುಟ
ಮುಂಬೈ: ಮಹಾರಾಷ್ಟ್ರದ ಅಂಬರ್ನಾಥ್ ಪುರಸಭೆಯಲ್ಲಿ ಅಚ್ಚರಿಯ ರಾಜಕೀಯ ಬೆಳವಣಿಗೆ ನಡೆದಿದ್ದು ಕಾಂಗ್ರೆಸ್ ಮತ್ತು ಬಿಜೆಪಿ ಮೈತ್ರಿಮಾಡಿಕೊಂಡು ಅಧಿಕಾರದ ಗದ್ದುಗೆ ಹಿಡಿದಿವೆ.
ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯನ್ನು ಅಧಿಕಾರದಿಂದ ಹೊರಗಿಡಲಾಗಿದೆ. ಬಿಜೆಪಿ, ಕಾಂಗ್ರೆಸ್ ಮೈತ್ರಿಕೂಟದಲ್ಲಿ ಎನ್ಸಿಪಿ (ಅಜಿತ್ ಪವಾರ್) ಬಣ ಕೂಡ ಅಧಿಕಾರದ ಭಾಗವಾಗಿದೆ.
ರಾಷ್ಟ್ರಮಟ್ಟದಲ್ಲಿ ‘ಕಾಂಗ್ರೆಸ್ ಮುಕ್ತ ಭಾರತ‘ ಮಾಡುವುದಾಗಿ ವಾದಿಸುತ್ತಿದ್ದ ಬಿಜೆಪಿಯೇ ತನ್ನ ಸಾಂಪ್ರದಾಯಿಕ ಪ್ರತಿಸ್ಪರ್ಧಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಮೈತ್ರಿಯ ಫಲವಾಗಿ ಬಿಜೆಪಿಯ ತೇಜಶ್ರೀ ಕರಂಜುಲೆ ಮೇಯರ್ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
ಈ ಪುರಸಭೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ- 27, ಬಿಜೆಪಿ–16, ಕಾಂಗ್ರೆಸ್–12 ಮತ್ತು ಎನ್ಸಿಪಿ(ಅಜಿತ್ ಪವಾರ್)–4 ಸ್ಥಾನಗಳನ್ನು ಪಡೆದಿವೆ. ಅಂಬರ್ನಾಥ್ ಪುರಸಭೆಯು 60 ಸದಸ್ಯರ ಸಂಖ್ಯಾಬಲವನ್ನು ಹೊಂದಿದೆ. ಇಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ವಿರೋಧ ಪಕ್ಷವಾಗಿದೆ.
ಈ ಬೆಳವಣಿಗೆ ಮಹಾರಾಷ್ಟ್ರದಲ್ಲಿ ಬಿಜೆಪಿಯೊಂದಿಗೆ ಸರ್ಕಾರ ಹಂಚಿಕೊಂಡಿರುವ ಶಿವಸೇನೆಯಲ್ಲಿ (ಶಿಂಧೆ) ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಮುಕ್ತ ಭಾರತದ ಬಗ್ಗೆ ಮಾತನಾಡಿದ ಪಕ್ಷವೇ ಇಂದು ಕಾಂಗ್ರೆಸ್ ಜೊತೆಗೆ ಅಧಿಕಾರ ನಡೆಸುತ್ತಿದೆ. ಇದು ಶಿವಸೇನೆಗೆ ಮಾಡಿದ ಮೋಸ ಎಂದು ಶಿವಸೇನೆ ನಾಯಕರು ಆರೋಪಿಸಿದ್ದಾರೆ.
ಒಂದು ವೇಳೆ ನಾವು ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರೇ ಅದು ‘ಅಪವಿತ್ರ ಮೈತ್ರಿ’ಯಾಗುತ್ತಿತ್ತು. ಕಳೆದ 25 ವರ್ಷಗಳಿಂದ ಇಲ್ಲಿ ಶಿವಸೇನೆ ಭ್ರಷ್ಟಾಚಾರ ನಡೆಸುತ್ತ ಬಂದಿದೆ ಎಂದು ಸ್ಥಳೀಯ ಬಿಜೆಪಿ ನಾಯಕ ಜಿ. ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಮೈತ್ರಿಗೆ ಹಲವು ಬಾರಿ ಪ್ರಯತ್ನಿಸಿದರೂ ಅವರಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಸಿಗಲಿಲ್ಲ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.