ನವದೆಹಲಿ: ರಾಜಸ್ಥಾನ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿ ಕಾಂಗ್ರೆಸ್ ಬಿಡುಗಡೆ ಮಾಡಿರುವ ಆಡಿಯೊ ಸಾಕ್ಷ್ಯದ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಬಿಜೆಪಿ ಆಗ್ರಹಿಸಿದೆ.
‘ಪ್ರಕರಣದ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ನಾವು ಆಗ್ರಹಿಸುತ್ತಿದ್ದೇವೆ. ದೂರವಾಣಿ ಕದ್ದಾಲಿಕೆ ಮಾಡಲಾಗಿದೆಯೇ? ರಾಜಸ್ಥಾನದಲ್ಲಿ ತುರ್ತು ಪರಿಸ್ಥಿತಿ ಇದೆಯೇ? ಎಲ್ಲ ರಾಜಕೀಯ ಪಕ್ಷಗಳನ್ನು ಈ ರೀತಿ ಗುರಿ ಮಾಡಲಾಗುತ್ತಿದೆಯೇ’ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಪ್ರಶ್ನಿಸಿದ್ದಾರೆ.
ರಾಜಸ್ಥಾನ ಸರ್ಕಾರವು ದೂರವಾಣಿ ಕದ್ದಾಲಿಕೆಯಲ್ಲಿ ನಿರತವಾಗಿದೆಯೇ? ಮುಖ್ಯಮಂತ್ರಿ ಮತ್ತು ಆಡಳಿತ ಪಕ್ಷದ ಇತರ ನಾಯಕರು ಆಡಿಯೊ ಅಧಿಕೃತ ಎನ್ನುತ್ತಿದ್ದಾರೆ. ಮತ್ತೊಂದೆಡೆ, ಇದು ಉದ್ದೇಶಪೂರ್ವಕ ಕೃತ್ಯ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಇದಕ್ಕೆರಾಜ್ಯ ಸರ್ಕಾರವು ಉತ್ತರಿಸಬೇಕು ಎಂದು ಪಾತ್ರಾ ಹೇಳಿದ್ದಾರೆ.
ಬಿಜೆಪಿಯು ರಾಜಸ್ಥಾನ ಸರ್ಕಾರ ಉರುಳಿಸುವ ಸಂಚು ರೂಪಿಸಿತ್ತು ಎಂದು ಶುಕ್ರವಾರ ಆರೋಪಿಸಿದ್ದ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ, ಬಿಜೆಪಿ ನಾಯಕರು ಮತ್ತು ಇತರರ ನಡುವೆ ನಡೆದಿದೆ ಎನ್ನಲಾದ ಸಂಭಾಷಣೆಗೆ ಸಂಬಂಧಿಸಿದ ಎರಡು ಧ್ವನಿಮುದ್ರಿಕೆಗಳನ್ನೂ ಬಿಡುಗಡೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನೀಡಿದ ದೂರಿನ ಆಧಾರದಲ್ಲಿ ರಾಜಸ್ಥಾನದ ವಿಶೇಷ ಕಾರ್ಯಾಚರಣೆ ಪಡೆಯ (ಎಸ್ಒಜಿ) ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಆರೋಪಿ ಸಂಜಯ್ ಜೈನ್ರನ್ನು ಶುಕ್ರವಾರ ಬಂಧಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.