ಅಖಿಲೇಶ್ ಯಾದವ್
ಲಖನೌ: ಕೇಂದ್ರದ ಬಿಜೆಪಿ ಸರ್ಕಾರ ದೇಶದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ಬದಲು ತನ್ನ ಗುಪ್ತ ಕಾರ್ಯಸೂಚಿಯನ್ನು ಪ್ರಚಾರ ಮಾಡಲು ತೊಡಗಿಕೊಂಡಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ.
ತಮ್ಮ ಪಕ್ಷದ ಯುವ ಘಟಕದ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಖಿಲೇಶ್ ಯಾದವ್, ಕೇಂದ್ರ ಸರ್ಕಾರವು ಅಗತ್ಯ ಉದ್ಯೋಗಾವಕಾಶಗಳನ್ನು ಒದಗಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ಉದ್ಯೋಗ, ಮೀಸಲಾತಿ, ಭಯೋತ್ಪಾದನೆ ಮುಂತಾದ ಜ್ವಲಂತ ಸಮಸ್ಯೆಗಳ ಬಗ್ಗೆ ಮಾತನಾಡುವುದನ್ನು ಬಿಟ್ಟು ಹಿಂದೂ–ಮುಸ್ಲಿಂ ಮುಂತಾದ ಭಾವನಾತ್ಮಕ ವಿಷಯಗಳನ್ನು ಮುಂದೆ ತಂದು ಯುವಕರ ದಾರಿ ತಪ್ಪಿಸುತ್ತಿದೆ ಎಂದರು.
ಬಿಜೆಪಿ ಸರ್ಕಾರಗಳು ಉತ್ತಮ ವೃತ್ತಿಪರ ಕೋರ್ಸ್ ಪದವಿ ಪಡೆದವರನ್ನೂ ಡೆಲಿವರಿ ಬಾಯ್ಗಳನ್ನಾಗಿ ಮಾಡುತ್ತಿದ್ದಾರೆ. ಇಂತಹ ವಿಷಯಗಳು ಮುನ್ನೆಲೆಗೆ ಬರಬಾರದೆಂದು ಮತ್ತು ತನ್ನ ಕಾರ್ಯಸೂಚಿಯನ್ನು ಪ್ರಚಾರ ಮಾಡಲು ಬಿಜೆಪಿ ನಾಟಕ ಮಾಡುತ್ತದೆ ಎಂದಿದ್ದಾರೆ.
ಬಿಜೆಪಿ ಸರ್ಕಾರವು ಸಾಂವಿಧಾನಿಕ ಹಕ್ಕುಗಳನ್ನು ದುರ್ಬಲಗೊಳಿಸುತ್ತಿದೆ ಮತ್ತು ಮೀಸಲಾತಿ ನೀತಿಗಳನ್ನು ಹಾಳು ಮಾಡುತ್ತಿದೆ ಎಂದು ಯಾದವ್ ಆರೋಪಿಸಿದ್ದಾರೆ. ಶಿಕ್ಷಣದಲ್ಲಿ ಬಹಳಷ್ಟು ರಾಜಕೀಯ ಹಸ್ತಕ್ಷೇಪ ನಡೆದಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.