ನವದೆಹಲಿ: ಪ್ರಸ್ತುತ ಕರ್ನಾಟಕದಲ್ಲಿ ಆಗುತ್ತಿರುವ ವಿವಾದಗಳಿಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಹೊಣೆಯಾಗಿದ್ದು, ಮುಂಬರುವ ಚುನಾವಣೆ ಗುರಿಯಾಗಿರಿಸಿಕೊಂಡು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಆರೋಪಿಸಿದ್ದಾರೆ.
ಈ ಕುರಿತು ಸುದ್ದಿಸಂಸ್ಥೆ 'ಎಎನ್ಐ' ಟ್ವೀಟಿಸಿದೆ.
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ. ರಾಜಕೀಯ ಪಕ್ಷಗಳ ಮುಖಂಡರು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತಲ್ಲೀನರಾಗಿದ್ದಾರೆ.
ಈಗ ಕರ್ನಾಟಕದಲ್ಲಿ ನಡೆಯುತ್ತಿರುವ ವಿವಾದಗಳಿಗೆ ಬಿಜೆಪಿ ಸದಸ್ಯರು ಹೊಣೆಗಾರರು. ಚುನಾವಣೆ ನಡೆಯಲಿರುವುದರಿಂದ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.
ಪ್ರಧಾನಿ ವಿರುದ್ಧ ವಾಗ್ದಾಳಿ...
ರಾಜ್ಯಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಉಪಸ್ಥಿತರಿದ್ದರು. ನಾವು ಹಣದುಬ್ಬರ, ನಿರುದ್ಯೋಗ, ರೈತರು, ಜಿಡಿಪಿ, ರಾಷ್ಟ್ರೀಯ ಭದ್ರತೆ ಮತ್ತು ಐಕ್ಯತೆ ಕುರಿತು ಸಮಸ್ಯೆಗಳನ್ನು ಎತ್ತಿದ್ದೇವೆ. ಆದರೆ ಪ್ರಧಾನಿಯವರು ವಿಷಯವನ್ನು ಬೇರೆಡೆಗೆ ತಿರುಗಿಸಿ ಕಾಂಗ್ರೆಸ್ ವಿರುದ್ಧ ನಿಂದನೆ ಮಾಡಿದ್ದಾರೆ. ಅವರು ಸಂಸತ್ತಿನ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿದ್ದರಲ್ಲದೆ, ಚುನಾವಣಾ ಪ್ರಚಾರಗಳಲ್ಲಿ ಏನು ಮಾಡುತ್ತಾರೋ ಅದನ್ನೇ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.