ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಗುರುವಾರ ಬಿಜೆಪಿ ಮುಖಂಡ ಅನಿಲ್ ಪರಿಹಾರ್ ಮತ್ತು ಆತನ ಸಹೋದರ ಅಜಿತ್ ಪರಿಹಾರ್ ಅವರನ್ನು ಉಗ್ರಗಾಮಿಗಳು ಹತ್ಯೆ ಮಾಡಿದ್ದನ್ನು ಖಂಡಿಸಿ ಜಮ್ಮುವಿನಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಯಿತು.
ಜಮ್ಮು ನಗರದಲ್ಲಿ ಭಾರತೀಯ ಜನತಾ ಯುವ ಮೋರ್ಚಾದ ಕಾರ್ಯಕರ್ತರು ಕೆಲ ಹೊತ್ತು ರಸ್ತೆ ತಡೆ ನಡೆಸಿದರು. ಟೈರ್ಗಳಿಗೆ ಬೆಂಕಿ ಹಚ್ಚಿ, ಪಾಕಿಸ್ತಾನ ವಿರೋಧಿ ಘೋಷಣೆಗಳನ್ನು ಕೂಗಿದರು.
ಅನೇಕ ಕಡೆಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಯಿತು. ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಕೋಮುಗಲಭೆ ಮುನ್ಸೂಚನೆ ಅರಿತ ಜಿಲ್ಲಾಡಳಿತ ಗುರುವಾರ ರಾತ್ರಿಯಿಂದಲೇ ಕರ್ಫ್ಯೂ ಜಾರಿ ಮಾಡಿತ್ತು.
ತನಿಖೆಗೆ ಎಸ್ಐಟಿ ರಚನೆ: ಅನಿಲ್ ಪರಿಹಾರ್ ಹಾಗೂ ಅಜಿತ್ ಪರಿಹಾರ್ ಕೊಲೆ ಕುರಿತ ತನಿಖೆಗೆ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಶುಕ್ರವಾರ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿದೆ.
ಮೃತ ಅನಿಲ್ ಅವರ ಇಬ್ಬರು ಖಾಸಗಿ ಭದ್ರತಾ ಅಧಿಕಾರಿಗಳನ್ನು (ಪಿಎಸ್ಒ) ಪೊಲೀಸರು ಬಂಧಿಸಿದ್ದಾರೆ.ಅನಿಲ್ ಅವರ ಭದ್ರತೆಗೆ ಓಂ ಪ್ರಕಾಶ್ ಮತ್ತು ಸಾಹಿಲ್ ಕುಮಾರ್ ಅವರನ್ನು ನೇಮಿಸಲಾಗಿತ್ತು. ಆದರೆ ಹತ್ಯೆ ನಡೆದಾಗ ಈ ಇಬ್ಬರು ಜೊತೆಗಿರಲಿಲ್ಲ.ವಿಚಾರಣೆ ನಡೆಸುವ ಸಲುವಾಗಿ ಈ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.