ADVERTISEMENT

ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಟಿಎಂಸಿಗೆ ಮರಳಲು ಬಯಸಿದ್ದಾರೆ: ಕುನಾಲ್ ಘೋಷ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಫೆಬ್ರುವರಿ 2022, 15:18 IST
Last Updated 9 ಫೆಬ್ರುವರಿ 2022, 15:18 IST
ಸುವೇಂದು ಅಧಿಕಾರಿ
ಸುವೇಂದು ಅಧಿಕಾರಿ   

ಕೋಲ್ಕತ್ತ: ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಅವರು ಟಿಎಂಸಿಗೆ ಮರಳಲು ಬಯಸಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ವಕ್ತಾರ ಕುನಾಲ್ ಘೋಷ್ ಬುಧವಾರ ಹೇಳಿದ್ದಾರೆ.

ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಅವರು, ‌‘ಬಿಜೆಪಿಗೆ ಸೇರ್ಪಡೆಯಾಗುವುದಕ್ಕೂ ಮುನ್ನ ಕಂಡಿದ್ದ ಕನಸುಗಳು ನುಚ್ಚು ನೂರಾಗಿವೆ. ಆ ಹಿನ್ನೆಲೆಯಲ್ಲಿ ಸುವೇಂದು ಅಧಿಕಾರಿ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ. ಅವರು ಇತರ ಮುಖಂಡರೊಂದಿಗೆ ಟಿಎಂಸಿಗೆ ಮರಳಲು ಬಯಸಿದ್ದಾರೆ ಎಂಬ ಮಾಹಿತಿ ನಮಗೆ ಇದೆ’ ಎಂದು ಘೋಷ್‌ ಹೇಳಿದ್ದಾರೆ.

‘ಬಿಜೆಪಿಗೆ ಸೇರ್ಪಡೆಗೊಂಡ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ ಅವರು ನಿಂದನೀಯ ಭಾಷೆಯನ್ನು ಬಳಸಿ ಟೀಕಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ’ ಎಂದು ಘೋಷ್ ಖಚಿತಪಡಿಸಿದ್ದಾರೆ.

ADVERTISEMENT

ಸುವೇಂದು ಅವರಂತಹ ವ್ಯಕ್ತಿಗಳಿಗೆ ನಮ್ಮ ಬಾಗಿಲು ತೆರೆದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಒಂದು ಕಾಲದಲ್ಲಿ ಆಪ್ತರಾಗಿದ್ದ ಸುವೇಂದು ಅವರು 2020ರ ಡಿಸೆಂಬರ್‌ನಲ್ಲಿ ಬಿಜೆಪಿ ಸೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.