ADVERTISEMENT

ಕಾಶ್ಮೀರ: ಬಿಜೆಪಿ ನಾಯಕನ ಮೇಲೆ ಗುಂಡು ಹಾರಿಸಿ ಹತ್ಯೆಗೈದ ಉಗ್ರರು

​ಪ್ರಜಾವಾಣಿ ವಾರ್ತೆ
Published 3 ಜೂನ್ 2021, 3:03 IST
Last Updated 3 ಜೂನ್ 2021, 3:03 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶ್ರೀನಗರ: ದಕ್ಷಿಣ ಕಾಶ್ಮೀರದ ಟ್ರಾಲ್ ಪ್ರದೇಶದಲ್ಲಿ ಬುಧವಾರ ಸಂಜೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಬಿಜೆಪಿ ನಾಯಕ ರಾಕೇಶ್ ಪಂಡಿತ್ ಮೃತಪಟ್ಟಿದ್ದಾರೆ.

ಗುಂಡಿನ ದಾಳಿಗೆ ಒಳಗಾದ ರಾಕೇಶ್‌ರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ರವಾನಿಸಲಾಯಿತಾದರೂ, ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ರಾಕೇಶ್ ಪಂಡಿತ್ ಅವರು ನೆರೆಮನೆಯ ಮುಶ್ತಾಖ್ ಅಹ್ಮದ್ ಮನೆಯ ಬಳಿ ಇದ್ದಾಗ ಉಗ್ರರು ಗುಂಡು ಹಾರಿಸಿದ್ದಾರೆ. ಇದೇ ಸಂದರ್ಭದಲ್ಲಿ ಮುಶ್ತಾಖ್ ಪುತ್ರಿ ಅಸೀಫಾಳಿಗೂ ಗುಂಡು ತಗುಲಿ ಗಾಯಗೊಂಡಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ADVERTISEMENT

ರಾಕೇಶ್ ಪಂಡಿತ್‌ಗೆ ಇಬ್ಬರು ವೈಯಕ್ತಿಕ ಭದ್ರತಾ ಸಿಬ್ಬಂದಿಗಳ ರಕ್ಷಣೆ ಒದಗಿಸಲಾಗಿತ್ತು. ಆದರೆ ಉಗ್ರರ ಗುಂಡಿನ ದಾಳಿ ನಡೆದ ಸಂದರ್ಭ ಅವರು ರಾಕೇಶ್ ಜತೆಗೆ ಇರಲಿಲ್ಲ ಎಂದು ವರದಿಗಳು ಹೇಳಿವೆ.

ಗುಂಡಿನ ದಾಳಿ ನಡೆದ ಬೆನ್ನಲ್ಲೇ ಭದ್ರತಾ ಪಡೆಗಳು ಉಗ್ರರಿಗಾಗಿ ಸುತ್ತಲಿನ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.