ADVERTISEMENT

ಸ್ವಾಗತಕಾರಿಣಿ ಹತ್ಯೆ ಆರೋಪ: ಉತ್ತರಾಖಂಡ ಬಿಜೆಪಿ ನಾಯಕನ ಮಗ ಬಂಧನ

ಪಿಟಿಐ
Published 23 ಸೆಪ್ಟೆಂಬರ್ 2022, 16:02 IST
Last Updated 23 ಸೆಪ್ಟೆಂಬರ್ 2022, 16:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಪೌಡೀ (ಉತ್ತರಾಖಂಡ): ರೆಸಾರ್ಟ್ ಸ್ವಾಗತಕಾರಿಣಿಯ ಹತ್ಯೆ ಆರೋಪದಲ್ಲಿ ಹರಿದ್ವಾರ ಬಿಜೆಪಿ ನಾಯಕ ವಿನೋದ್ ಆರ್ಯ ಅವರ ಮಗ ಪುಳಕಿತ್ ಆರ್ಯ ಸೇರಿದಂತೆ ಮೂವರನ್ನು ಉತ್ತರಾಖಂಡ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಪುಳಕಿತ್ ಆರ್ಯ ಅವರ ಮಾಲೀಕತ್ವದ ರೆಸಾರ್ಟ್‌ನಲ್ಲಿ ಸ್ವಾಗತಕಾರಿಣಿಯಾಗಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದರು. ಅವರ ಮೃತದೇಹ ಕಾಲುವೆಯೊಂದರಲ್ಲಿ ಪತ್ತೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಇನ್ನಿಬ್ಬರನ್ನು ರೆಸಾರ್ಟ್ ವ್ಯವಸ್ಥಾಪಕ ಸೌರಭ್ ಭಾಸ್ಕರ್ ಮತ್ತು ಸಹಾಯಕ ವ್ಯವಸ್ಥಾಪಕ ಅಂಕಿತ್ ಗುಪ್ತಾ ಎಂದು ಗುರುತಿಸಲಾಗಿದೆ.

ಯುವತಿಯನ್ನು ಹತ್ಯೆ ಮಾಡಿ ಮೃತದೇಹವನ್ನು ಕಾಲುವೆಗೆ ಎಸೆದಿದ್ದಾಗಿ ಬಂಧಿತರು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೌಡೀ ಎಎಸ್‌ಪಿ ಶೇಖರ್ ಚಂದ್ರ ಸೂಯಲ್ ಮಾಹಿತಿ ನೀಡಿದ್ದಾರೆ.

ಆರಂಭದಲ್ಲಿ ಆರೋಪಿಗಳು ಪೊಲೀಸರನ್ನು ತಪ್ಪುದಾರಿಗೆಳೆಯಲು ಯತ್ನಿಸಿದ್ದರು. ಆಮೇಲೆ ತಪ್ಪೊಪ್ಪಿಕೊಂಡರು ಎಂದು ಎಎಸ್‌ಪಿ ಹೇಳಿದ್ದಾರೆ.

ಯುವತಿಯ ಪತ್ತೆಗಾಗಿ ಪೊಲೀಸರ ತಂಡವನ್ನು ನಿಯೋಜಿಸಲಾಗಿತ್ತು. 24 ಗಂಟೆಯೊಳಗೆ ಇಡೀ ಪ್ರಕರಣವನ್ನು ಬಯಲಿಗೆಳೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಂಧಿತರನ್ನು ಪೌಡೀಯ ಕೋಟ್‌ದ್ವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದೆವು. ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ನಾಯಕ ವಿನೋದ್ ಆರ್ಯ ಅವರು ರಾಜ್ಯ ಸಚಿವ ದರ್ಜೆಯ ಸ್ಥಾನಮಾನ ಹೊಂದಿದ್ದಾರೆ. ಆದರೆ ಸರ್ಕಾರದಲ್ಲಿ ಯಾವುದೇ ಹುದ್ದೆಯನ್ನು ಹೊಂದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.