ರಾಂಚಿ: ಜಾರ್ಖಂಡ್ ರಾಜ್ಯದ ಆಡಳಿತವು ಬಿಜೆಪಿಯ ಕೈಜಾರಿ ಜೆಎಂಎಂ–ಕಾಂಗ್ರೆಸ್–ಆರ್ಜೆಡಿ ಮೈತ್ರಿಕೂಟದ ಪಾಲಾಗಿದೆ.
81 ಸದಸ್ಯ ಬಲದ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಜೆಎಂಎಂ ನೇತೃತ್ವದ ಮೈತ್ರಿಯು ಸರ್ಕಾರ ರಚನೆಗೆ ಬೇಕಾದ ಬಹುಮತವನ್ನು ಪಡೆದಿದೆ.ಮುಖ್ಯಮಂತ್ರಿ ರಘುವರ ದಾಸ್ ದಾಸ್ ಅವರು ಬಿಜೆಪಿಯ ಬಂಡಾಯ ಅಭ್ಯರ್ಥಿ ಸರಯೂ ರಾಯ್ ವಿರುದ್ಧ 15,833 ಮತಗಳ ಅಂತರದಿಂದ ಸೋತಿದ್ದಾರೆ. ಬಿಜೆಪಿಗೆ ಸೋಲಾಗುತ್ತಿರುವುದು ಖಚಿತವಾಗುತ್ತಿದ್ದಂತೆಯೇ ದಾಸ್ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದರು.
‘ಇದು ನನ್ನ ಸೋಲೇ ವಿನಾ ಪಕ್ಷದ ಸೋಲಲ್ಲ’ ಎಂದು ಅವರು ಪ್ರತಿಕ್ರಿಯೆ ನೀಡಿದರು. ಇತ್ತ ಕಾಂಗ್ರೆಸ್–ಜೆಎಂಎಂ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಜೆಎಂಎಂ ನಾಯಕ ಹೇಮಂತ್ ಸೊರೇನ್ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುವುದು ಖಚಿತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ಸೊರೇನ್ ಅವರನ್ನು ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ.
5ನೇ ರಾಜ್ಯ ಕಳೆದುಕೊಂಡ ‘ಕಮಲ’: ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರದಲ್ಲಿ ಎರಡನೇ ಅವಧಿಗೆ ಅಧಿಕಾರ ವಹಿಸಿಕೊಂಡ ಬಳಿಕ ಬಿಜೆಪಿ ಅನುಭವಿಸಿದ ಮೊದಲ ಸ್ಪಷ್ಟ ಸೋಲು ಇದು.ಬಿಜೆಪಿಯ ಕೈಜಾರಿದ ಐದು ರಾಜ್ಯಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದಿದ್ದರೆ, ಉಳಿದೆರಡು ಕಡೆ ಪ್ರಾದೇಶಿಕ ಪಕ್ಷಗಳಿಗೆ ಬೆಂಬಲ ನೀಡಿದೆ. 2018ರ ಕೊನೆಯಲ್ಲಿ ಮಧ್ಯಪ್ರದೇಶ, ಛತ್ತೀಸ್ಗಡ ಹಾಗೂ ರಾಜಸ್ಥಾನದಲ್ಲಿ ಹಾಗೂ ಈಚೆಗೆ ಮಹಾರಾಷ್ಟ್ರದಲ್ಲಿ ಬಿಜೆಪಿಯು ಅಧಿಕಾರ ಕಳೆದುಕೊಂಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.