ಅರವಿಂದ ಕೇಜ್ರಿವಾಲ್
(ಪಿಟಿಐ ಚಿತ್ರ)
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಕಮಲ ಪಕ್ಷದ ಸಂಕಲ್ಪ ಪತ್ರವು 'ದೇಶಕ್ಕೆ ಅಪಾಯಕಾರಿ' ಎಂದು ಹೇಳಿದ್ದಾರೆ.
'ಒಂದು ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣವನ್ನು ಸ್ಥಗಿತಗೊಳಿಸಲಿದೆ. ಮೊಹಲ್ಲಾ ಕ್ಲಿನಿಕ್ ಸೇರಿದಂತೆ ಉಚಿತ ಆರೋಗ್ಯ ಯೋಜನೆಗಳನ್ನು ಕಿತ್ತು ಹಾಕಲು ಯೋಜಿಸುತ್ತಿದೆ' ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, 'ಬಿಜೆಪಿ ತನ್ನ ನಿಜವಾದ ಉದ್ದೇಶಗಳನ್ನು ಪ್ರಣಾಳಿಕೆಯಲ್ಲಿ ಬಹಿರಂಗಪಡಿಸಿದೆ' ಎಂದು ಕಮಲ ಪಕ್ಷವನ್ನು ಬೆಂಬಲಿಸುವ ಮತದಾರರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.
'ಬಿಜೆಪಿ ಗೆದ್ದರೆ ದೆಹಲಿಯಲ್ಲಿ ಬಡವರಿಗೆ ಬದುಕಲು ಕಷ್ಟವಾಗಲಿದೆ. ಬಿಜೆಪಿ ಪ್ರಣಾಳಿಕೆಯು ಜನಸಾಮಾನ್ಯರ ಕಲ್ಯಾಣದ ಕಾರ್ಯಕ್ರಮಗಳ ಮೇಲಿನ ನೇರ ದಾಳಿಯಾಗಿದೆ' ಎಂದು ಅವರು ಆರೋಪಿಸಿದ್ದಾರೆ.
ಕೇಜ್ರಿವಾಲ್ ಆರೋಪದ ಕುರಿತು ಬಿಜೆಪಿ ಇನ್ನಷ್ಟೇ ಪ್ರತಿಕ್ರಿಯಿಸಬೇಕಿದೆ.
70 ಸದಸ್ಯ ಬಲದ ದೆಹಲಿಯಲ್ಲಿ ಫೆಬ್ರುವರಿ 5ರಂದು ಮತದಾನ ನಡೆಯಲಿದ್ದು, ಫೆ.8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.