ನವದೆಹಲಿ: ಪ್ರಧಾನಿಯವರ ಆಪ್ತರೆಂದೇ ಪರಿಗಣಿಸಿರುವ ನಿವೃತ್ ಐಎಎಸ್ ಅಧಿಕಾರಿ ಅರವಿಂದ್ ಕುಮಾರ್ ಶರ್ಮಾ ಅವರನ್ನು ಈ ತಿಂಗಳಾಂತ್ಯದಲ್ಲಿ ನಡೆಯಲಿರುವ ಉತ್ತರ ಪ್ರದೇಶದ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.
ಇತ್ತೀಚೆಗಷ್ಟೇ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದ ಎ.ಕೆ.ಶರ್ಮಾ ಅವರು ಗುರುವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯಲ್ಲಿ, ಶರ್ಮಾ ಅವರ ಜತೆಗೆ ಉಪ ಮುಖ್ಯಮಂತ್ರಿ ದಿನೇಶ್ ಶರ್ಮಾ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಮತ್ತು ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರ ಹೆಸರನ್ನು ಬಿಜೆಪಿ ಬಿಡುಗಡೆ ಮಾಡಿದೆ. ಉತ್ತರ ಪ್ರದೇಶದಲ್ಲಿ ವಿಧಾನಪರಿಷತ್ನ ಒಟ್ಟು 12 ಸ್ಥಾನಗಳಿಗೆ ಜನವರಿ 28 ರಂದು ಚುನಾವಣೆ ನಡೆಯಲಿದೆ.
ಚುನಾವಣೆಯ ನಂತರ ಶರ್ಮಾ ಅವರಿಗೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದಲ್ಲಿ ಪ್ರಮುಖ ಹುದ್ದೆ ದೊರೆಯುವ ಸಾಧ್ಯತೆ ಇದೆ ಎಂಬ ಮಾತು ಬಲವಾಗಿ ಕೇಳಿಬರುತ್ತಿದೆ.
ಉತ್ತರ ಪ್ರದೇಶ ಮೂಲದ ಗುಜರಾತ್ ಕೇಡರ್ನ 1988ನೇ ಬ್ಯಾಚ್ ಐಎಎಸ್ ಅಧಿಕಾರಿ ಎ.ಕೆ.ಶರ್ಮಾ, ಗುಜರಾತ್ನಲ್ಲಿ ನರೇಂದ್ರ ಮೋದಿಯವರ ಆಡಳಿತದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಆ ಅವಧಿಯಲ್ಲಿ ಮೋದಿಯವರ ನಂಬಿಗಸ್ಥ ಅಧಿಕಾರಿಗಳ ಪಡೆಯಲ್ಲಿ ಕೆ.ಶರ್ಮಾ ಕೂಡ ಒಬ್ಬರು. ನಂತರ 2014ರಲ್ಲಿ ಮೋದಿಯವರು ಪ್ರಧಾನಿಯಾದ ಮೇಲೆ, ಪ್ರಧಾನ ಮಂತ್ರಿ ಕಚೇರಿಯಲ್ಲಿ ಶರ್ಮಾ ಪ್ರಮುಖ ಹುದ್ದೆಯಲ್ಲಿ ಸೇವೆ ಸಲ್ಲಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.