ADVERTISEMENT

ಹಾಥರಸ್‌ ಸಂತ್ರಸ್ತೆ ಕುಟುಂಬದ ಭೇಟಿಗೆ ಅವಕಾಶ ನೀಡಿ: ಯೋಗಿಗೆ ಉಮಾ ಭಾರತಿ ವಿನಂತಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಅಕ್ಟೋಬರ್ 2020, 15:12 IST
Last Updated 2 ಅಕ್ಟೋಬರ್ 2020, 15:12 IST
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಚರ್ಚೆಯಲ್ಲಿ ತೊಡಗಿರುವುದು/ ಚಿತ್ರ- ಪಿಟಿಐ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಚರ್ಚೆಯಲ್ಲಿ ತೊಡಗಿರುವುದು/ ಚಿತ್ರ- ಪಿಟಿಐ   

ನವದೆಹಲಿ: ಹಾಥರಸ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟಿರುವ ಯುವತಿಯ ಕುಟುಂಬವನ್ನು ಭೇಟಿಯಾಗಲು ರಾಜಕೀಯ ನಾಯಕರಿಗೆ ಅವಕಾಶ ನೀಡಬೇಕೆಂದು ಬಿಜೆಪಿ ನಾಯಕಿ ಉಮಾ ಭಾರತಿ ಅವರು ಯೋಗಿ ಆದಿತ್ಯನಾಥ್‌ಗೆ ವಿನಂತಿಸಿಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, 'ಯುವತಿಯು ದಲಿತ ಕುಟುಂಬಕ್ಕೆ ಸೇರಿದವಳು. ಪೊಲೀಸರು ಆತುರದಿಂದ ಆಕೆಯ ಕೊನೆಯ ವಿಧಿಗಳನ್ನು ನಡೆಸಿದ್ದಾರೆ. ಈಗ ಆಕೆಯ ಕುಟುಂಬದ ಮೇಲೆ ನಿರ್ಬಂಧ ಹೇರಲಾಗಿದೆ. ತನಿಖೆ ನಡೆಯುತ್ತಿರುವ ಸಮಯದಲ್ಲಿ ಸಂತ್ರಸ್ತೆಯ ಕುಟುಂಬದ ಮೇಲೆ ನಿರ್ಬಂಧ ಹೇರುವ ಯಾವುದೇ ನಿಯಮದ ಬಗ್ಗೆ ನನಗೆ ತಿಳಿದಿಲ್ಲ. ಇದರಿಂದ ಎಸ್‌ಐಟಿ ತನಿಖೆಯ ಬಗ್ಗೆಯೇ ಪ್ರಶ್ನೆಗಳು ಏಳುತ್ತವೆ' ಎಂದು ಉಮಾ ಭಾರತಿ ಹೇಳಿದ್ದಾರೆ.

'ನೀವು ತುಂಬಾ ಪ್ರಾಮಾಣಿಕ ವ್ಯಕ್ತಿತ್ವ ಹೊಂದಿದ್ದೀರಿ ಎಂಬುದು ನನಗೆ ಗೊತ್ತು. ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಲು ಮಾಧ್ಯಮ ವ್ಯಕ್ತಿಗಳು ಮತ್ತು ಇತರ ರಾಜಕೀಯ ಪಕ್ಷಗಳಿಗೆ ಅವಕಾಶ ನೀಡುವಂತೆ ನಾನು ನಿಮ್ಮನ್ನು ವಿನಂತಿಸುತ್ತೇನೆ' ಎಂದು ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಅವರು ಯೋಗಿ ಆದಿತ್ಯನಾಥ್‌ಗೆ ಕೇಳಿಕೊಂಡಿದ್ದಾರೆ.

ADVERTISEMENT

ಕಳೆದ ವಾರ ಕೋವಿಡ್‌ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಉಮಾ ಭಾರತಿಯವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆಗೊಳಗಾಗಿದ್ದ ಉತ್ತರ ಪ್ರದೇಶದ ಹಾಥರಸ್‌ನ 19 ವರ್ಷದ ಯುವತಿ ದೆಹಲಿಯಲ್ಲಿ ಮಂಗಳವಾರ ಮೃತಪಟ್ಟಿದ್ದರು. ಮೂಳೆ ಮುರಿತ ಮತ್ತು ನಾಲಿಗೆಯು ತುಂಡಾಗಿದ್ದ ಯುವತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದರು.

ಮೃತಪಟ್ಟ ಯುವತಿಯ ಅಂತ್ಯಕ್ರಿಯೆಯನ್ನು ಉತ್ತರ ಪ್ರದೇಶ ಪೊಲೀಸರು ನಡುರಾತ್ರಿಯಲ್ಲೇ ಮಾಡಿ ಮುಗಿಸಿದ್ದರು. ಅಂತ್ಯಕ್ರಿಯೆಗೆ ತೆರಳಲು ತಮಗೂ ಅವಕಾಶ ನೀಡಿರಲಿಲ್ಲ ಎಂದು ಸಂತ್ರಸ್ತೆಯ ಕುಟುಂಬ ಸದಸ್ಯರು ಆರೋಪಿಸಿದ್ದರು. ಈ ಘಟನೆಯು ದೇಶದಾದ್ಯಂತ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.