ಲಖನೌ: ‘ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ ಎದುರಾಗಿದೆ. ಹಾಗಾಗಿ, ಬಿಜೆಪಿ ಸರ್ಕಾರವು ಹಲವು ಯೋಜನೆಗಳನ್ನು ಉದ್ಘಾಟಿಸುತ್ತಿದ್ದು, ಕೆಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುತ್ತಿದೆ’ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸೋಮವಾರ ಆರೋಪಿಸಿದ್ದಾರೆ.
ಸೋಮವಾರ ವರ್ಚ್ಯುವಲ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಶದ 9 ವೈದ್ಯಕೀಯ ಕಾಲೇಜುಗಳಿಗೆ ಚಾಲನೆ ನೀಡಿ, ಈ ಹಿಂದಿನ ಸರ್ಕಾರವನ್ನು ಟೀಕಿಸಿ ಮಾತನಾಡಿದ ಬಳಿಕ, ಅಖಿಲೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ವೈದ್ಯಕೀಯ ಕಾಲೇಜುಗಳ ಉದ್ಘಾಟನೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅಖಿಲೇಶ್, ‘ಈಗ ಚುನಾವಣೆಗಳು ಹತ್ತಿರದಲ್ಲಿವೆ. ಜನರು ಅವರನ್ನು (ಬಿಜೆಪಿ) ಸೋಲಿಸಲು ಹೊರಟಿದ್ದಾರೆ. ಹಾಗಾಗಿ, ಬಿಜೆಪಿ ಈಗ ಸೋಲಿನ ಭೀತಿಯಲ್ಲಿ ಹಲವು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯ ನೆರವೇರಿಸುತ್ತಿದೆ’ ಎಂದರು.
‘ರಾಜ್ಯದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ವಿಶ್ವವಿದ್ಯಾಲಯ ಸರಿಯಾಗಿ ಕಾರ್ಯನಿರ್ವಹಿಸಲು ಮೂಲಸೌಕರ್ಯವಿಲ್ಲ. ಅಂತೆಯೇ ಈಗಿರುವ ವೈದ್ಯಕೀಯ ಕಾಲೇಜುಗಳಿಗೆ ಏಕೆ ಅನುದಾನ ನೀಡಿಲ್ಲ? ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಜನರಿಗೆ ಆಮ್ಲಜನಕ, ಹಾಸಿಗೆಗಳು, ಔಷಧಿಗಳು ಮತ್ತು ಚಿಕಿತ್ಸೆಯ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಬೇಕಾದ ಸರ್ಕಾರ ಎಲ್ಲಿತ್ತು’ ಎಂದೂ ಅಖಿಲೇಶ್ ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.