ADVERTISEMENT

ಶಾಸಕರಿಗೆ ಬೆದರಿಕೆ ಹಾಕಿ ದೆಹಲಿ ಸರ್ಕಾರ ಉರುಳಿಸಲು ಬಿಜೆಪಿ ಯತ್ನ: ಎಎಪಿ ಆರೋಪ

ಶಾಸಕರ ಮೇಲೆ ಸಿಬಿಐ-ಇ.ಡಿ ದಾಳಿ ನಡೆಸುವ ಬೆದರಿಕೆ: ಎಎಪಿ

ಪಿಟಿಐ
Published 18 ಮಾರ್ಚ್ 2023, 9:13 IST
Last Updated 18 ಮಾರ್ಚ್ 2023, 9:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೆಹಲಿ ವಿಧಾನಸಭೆಯಲ್ಲಿ ಎಂಟು ಶಾಸಕರನ್ನು ಹೊಂದಿರುವ ಬಿಜೆಪಿ, ಅವಿಶ್ವಾಸ ನಿರ್ಣಯದ ನೆಪದಲ್ಲಿ ಶಾಸಕರಿಗೆ ಬೆದರಿಕೆ ಹಾಕಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿರುವ ಎಎಪಿ ರಾಜ್ಯಸಭೆ ಸಂಸದ ರಾಘವ್‌ ಚಡ್ಡಾ, ಪಕ್ಷದ ಶಾಸಕರಿಗೆ ಬಿಜೆಪಿ ಎರಡು ಆಯ್ಕೆಗಳನ್ನು ನೀಡಿದೆ. ಕಮಲ ಪಕ್ಷವನ್ನು ಸೇರಬೇಕು ಅಥವಾ ಸಿಬಿಐ-ಇ.ಡಿ ದಾಳಿ ಎದುರಿಸಿ ಜೈಲಿಗೆ ಅಟ್ಟುವ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಆರೋಪಿಸಿದರು.

ಮಧ್ಯಪ್ರದೇಶ, ಮಹಾರಾಷ್ಟ್ರದಂತೆ ಸರ್ಕಾರ ಉರುಳಿಸಲು ಯತ್ನಿಸಲಾಗುತ್ತಿದೆ. ದೆಹಲಿ ಚುನಾವಣೆಯಲ್ಲಿ ಬಿಜೆಪಿ ನಿರಂತರವಾಗಿ ಸೋಲುತ್ತಿದೆ. ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರ ಪರಿಸ್ಥಿತಿ ನಿಮಗೂ ಬರಲಿದೆ ಎಂದು ಶಾಸಕರಿಗೆ ಬೆದರಿಕೆ ಹಾಕಲಾಗುತ್ತಿದೆ. ಬಿಜೆಪಿ ಇಂತಹ ಹೀನ ಕೃತ್ಯಗಳನ್ನು ನಿಲ್ಲಿಸಬೇಕು. ಎಷ್ಟು ಸಲ ಪ್ರಯತ್ನಿಸಿದರೂ ನಮ್ಮ ಶಾಸಕರಿಗೆ ಆಮಿಷ ಒಡ್ಡಲು ಸಾಧ್ಯವಾಗಿಲ್ಲ ಎಂದು ಹೇಳಿದರು.

ಕೇಂದ್ರ ತನಿಖಾ ಸಂಸ್ಥೆಗಳನ್ನು ಆಮ್ ಆದ್ಮಿ ಪಕ್ಷದ ವಿರುದ್ಧ ದುರುಪಯೋಗ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು. ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಮನೀಷ್ ಸಿಸೋಡಿಯಾ ಅವರನ್ನು ಬಂಧಿಸಿರುವುದಕ್ಕೆ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿ ವಿಧಾನಸಭೆ ಅಧಿವೇಶನ ಶುಕ್ರವಾರ ಆರಂಭವಾಗಿದೆ. ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಎಎಪಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ವಿರೋಧ ಪಕ್ಷದ ನಾಯಕ ರಾಮವೀರ್ ಸಿಂಗ್ ಬಿಧುರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.