ಪ್ರಾತಿನಿಧಿಕ ಚಿತ್ರ
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಯು (ಸಿಇಸಿ) ಭಾನುವಾರ ಸಂಜೆ ಸಭೆ ನಡೆಸಿದೆ.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಹಾಗೂ ಜಮ್ಮು ಮತ್ತು ಕಾಶ್ಮೀರದ ಕೆಲವು ನಾಯಕರೊಂದಿಗೆ ಸಭೆಯಲ್ಲಿ ಭಾಗವಹಿಸಿದ್ದರು.
ಕೇಂದ್ರಾಡಳಿತ ಪ್ರದೇಶದಲ್ಲಿ 50ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಣಕ್ಕಿಳಿಯುವ ಬಗ್ಗೆ ಚರ್ಚೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ನಡ್ಡಾ ಮತ್ತು ಶಾ ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರದ ನಾಯಕರು ಕಳೆದ ವಾರವೂ ಸುದೀರ್ಘ ಮಾತುಕತೆ ನಡೆಸಿದ್ದರು.
ಅಲ್ಲಿನ 90 ವಿಧಾನಸಭಾ ಕ್ಷೇತ್ರಗಳಿಗೆ ಸೆಪ್ಟೆಂಬರ್ 18, 25 ಹಾಗೂ ಅಕ್ಟೋಬರ್ 1ರಂದು ಮತದಾನ ನಡೆಯಲಿದೆ. ರಾಜ್ಯ ವಿಭಜನೆಯಾಗುವುದಕ್ಕೂ ಮುನ್ನ 2014ರಲ್ಲಿ ನಡೆದ ಕಳೆದ ಚುನಾವಣೆಯಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು.
ಇದೇ ವಾರ ಮತ್ತೊಮ್ಮೆ ಸಿಇಸಿ ಸಭೆ
ಹರಿಯಾಣ ವಿಧಾನಸಭೆಗೂ ಚುನಾವಣೆ ದಿನಾಂಕ ನಿಗದಿಯಾಗಿದೆ. ಅಲ್ಲಿ ಪಕ್ಷದಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಅಂತಿಮ ಪಟ್ಟಿ ತಯಾರಿ ಹಾಗೂ ರಣತಂತ್ರಗಳ ಕುರಿತು ಚರ್ಚಿಸಲು ವಾರಾಂತ್ಯದಲ್ಲಿ ಮತ್ತೊಮ್ಮೆ ಸಿಇಸಿ ಸಭೆ ನಡೆಯಲಿದೆ.
ಇಲ್ಲಿನ 90 ಸ್ಥಾನಗಳಿಗೆ ಅಕ್ಟೋಬರ್ 1ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.
ಎರಡೂ ವಿಧಾನಸಭೆ ಚುನಾವಣೆ ಫಲಿತಾಂಶ ಅಕ್ಟೋಬರ್ 4ರಂದು ಪ್ರಕಟವಾಗಲಿದೆ. ಈ ಎರಡೂ ಕಡೆ ಬಿಜೆಪಿಗೆ ಕಾಂಗ್ರೆಸ್ ಭಾರಿ ಪೈಪೋಟಿ ನೀಡುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.