ಲಖನೌ: ಕೋವಿಡ್–19 ಕುರಿತು ಉತ್ತರ ಪ್ರದೇಶ ಸರ್ಕಾರದ ಕ್ರಮಗಳನ್ನು ಪ್ರಶ್ನಿಸಿರುವ ಮಾಜಿ ಐಎಎಸ್ ಅಧಿಕಾರಿ ಸೂರ್ಯ ಪ್ರತಾಪ್ ಸಿಂಗ್ ಅವರ ವಿರುದ್ಧ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ.
‘ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕುರಿತು ಸಭೆಯೊಂದರಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕೆಲ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ’ ಎಂದು ಪುನರುಚ್ಚರಿಸಿರುವ ಸೂರ್ಯಪ್ರತಾಪ್ ಸಿಂಗ್, ‘ಈ ಸಂಬಂಧ ನಾನು ಜೈಲಿಗೆ ಹೋಗಲೂ ಸಿದ್ಧ’ ಎಂದು ಹೇಳಿದ್ದಾರೆ.
2016ರಲ್ಲಿ ವಿಆರ್ಎಸ್ ಪಡೆದಿರುವ ಸೂರ್ಯಪ್ರತಾಪ್ ಸಿಂಗ್ ಅವರ ವಿರುದ್ಧ ಜನರ ಮನಸ್ಸಿನಲ್ಲಿ ಭಯವುಂಟು ಮಾಡಬಲ್ಲ, ದಾರಿತಪ್ಪಿಸುವ ಮಾಹಿತಿ ಹರಡಿದ ಆರೋಪದಲ್ಲಿ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ಐಟಿ ಕಾಯ್ದೆ, ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಸಾಂಕ್ರಾಮಿಕ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
‘ಉತ್ತರ ಪ್ರದೇಶದ ಕೋವಿಡ್ ಕಾಯ್ದೆ ಪ್ರಕಾರ, ಪರೀಕ್ಷೆ ಇಲ್ಲ, ಕೊರೊನಾ ಇಲ್ಲ’, ರಾಜ್ಯದಲ್ಲಿ ಕಡಿಮೆ ಪ್ರಮಾಣದಲ್ಲಿ ಸೋಂಕು ಪರೀಕ್ಷೆ ನಡೆಸುತ್ತಿರುವುದರಿಂದ ಕೊರೊನಾ ವೈರಸ್ ಪ್ರಕರಣ ಸಂಖ್ಯೆ ಕಡಿಮೆ ಇದೆ’ ಎಂದೂ ಸಿಂಗ್ ಟ್ವೀಟ್ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.