ನವದೆಹಲಿ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆಯೊಂದರ ಕಾಮಗಾರಿಯ ಗುತ್ತಿಗೆ ನೀಡಲು ಗುತ್ತಿಗೆದಾರರಿಂದ ಲಂಚ ಪಡೆದ ಆರೋಪದ ಮೇಲೆ ಬಿಜೆಪಿ ಶಾಸಕ ಬಿ.ಎಸ್.ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ನ ತನಿಖೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.
ತನಿಖೆಗೆ ಅನುಮತಿ ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಯಡಿಯೂರಪ್ಪ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹಾಗೂ ಹಿಮಾ ಕೊಹ್ಲಿ ಅವರನ್ನು ಒಳಗೊಂಡ ನ್ಯಾಯಪೀಠವು, ದೂರುದಾರರಾದ ಟಿ.ಜೆ. ಅಬ್ರಾಹಂ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.
ಲಂಚ ಪಡೆದ ಆರೋಪದ ಮೇಲೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಬಿ.ಎಸ್. ಯಡಿಯೂರಪ್ಪ, ಅವರ ಮಗ ಬಿ.ವೈ. ವಿಜಯೇಂದ್ರ ಸೇರಿದಂತೆ ಒಂಬತ್ತು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲು ಹೈಕೋರ್ಟ್ ಸೂಚಿಸಿತ್ತು. ಲೋಕಾಯುಕ್ತ ಪೊಲೀಸರು ಕಳೆದ ಶುಕ್ರವಾರ ಎಫ್ಐಆರ್ ದಾಖಲಿಸಿದ್ದರು.
ಯಡಿಯೂರಪ್ಪ ಅಳಿಯ ವಿರೂಪಾಕ್ಷಪ್ಪ ಯಮಕನಮರಡಿ, ಅವರ ಮಗ ಶಶಿಧರ ಮರಡಿ, ವಿರುಪಾಕ್ಷಪ್ಪ ಅವರ ಅಳಿಯ ಸಂಜಯ್ ಶ್ರೀ, ಗುತ್ತಿಗೆದಾರ ಚಂದ್ರಕಾಂತ್ ರಾಮಲಿಂಗಂ, ಐಎಎಸ್ ಅಧಿಕಾರಿ ಜಿ.ಸಿ. ಪ್ರಕಾಶ್ ಮತ್ತು 37 ಕ್ರೆಸೆಂಟ್ ಹೋಟೆಲ್ ಮಾಲೀಕ ಕೆ.ರವಿ ಇತರ ಆರೋಪಿಗಳು. ಬಿಎಸ್ವೈ ವಿರು ದ್ದದ ತನಿಖೆಗೆ ನ್ಯಾಯಪೀಠ ತಡೆ ನೀಡಿದೆ. ಈ ತಡೆಯಾಜ್ಞೆ ಉಳಿದ ಆರೋಪಿಗಳ ತನಿಖೆಗೆ ಅಡ್ಡಿಯಾಗುವುದಿಲ್ಲ.
ಬೆಂಗಳೂರು ಪೂರ್ವ ತಾಲ್ಲೂಕಿನ ಕೋನದಾಸನಪುರದಲ್ಲಿ ಬಿಡಿಎ ನಿರ್ಮಿಸುತ್ತಿರುವ ಬಹುಮಹಡಿ ವಸತಿ ಸಮುಚ್ಚಯದ ಕಾಮಗಾರಿ ಗುತ್ತಿಗೆ ಸಂಬಂಧ ಚಂದ್ರಕಾಂತ್ ರಾಮಲಿಂಗಂ ಅವರಿಂದ ಇತರೆ ಆರೋಪಿಗಳು ಒಟ್ಟು₹ 29.5 ಕೋಟಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಟಿ.ಜೆ. ಅಬ್ರಹಾಂ ದೂರು ಸಲ್ಲಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.