ಲಖನೌ: ಲೋಕಸಭಾ ಚುನಾವಣೆಯಲ್ಲಿ ಬಿಎಸ್ಪಿ ಏಕಾಂಗಿಯಾಗಿ ಸ್ಪರ್ಧಿಸಲಿದ್ದು, ನಾನು ರಾಜಕೀಯ ನಿವೃತ್ತಿ ಪಡೆಯುತ್ತಿಲ್ಲ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜಕೀಯ ಉತ್ತರಾಧಿಕಾರಿಯಾಗಿ ಆಕಾಶ್ ಆನಂದ್ ಅವರನ್ನು ಘೋಷಿಸಿದ ನಂತರ ಕೆಲ ಮಾಧ್ಯಮಗಳು ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ ಎಂದು ವರದಿ ಮಾಡಿವೆ. ಇದು ಸತ್ಯಕ್ಕೆ ದೂರವಾದ ಮಾತು. ಜನ ಸೇವೆ ಮಾಡುವ ನನ್ನ ಕೆಲಸ ಮುಂದುವರಿಯಲಿದೆ’ ಎಂದರು.
‘ಲೋಕಸಭೆ ಚುನಾವಣೆಯಲ್ಲಿ ಬಿಎಸ್ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಚುನಾವಣೆಯ ಪೂರ್ವದಲ್ಲಿ ಯಾವುದೇ ರಾಜಕೀಯ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳಲು ಬಯಸುವುದಿಲ್ಲ. ಚುನಾವಣೆ ನಂತರವಷ್ಟೇ ಈ ಬಗ್ಗೆ ಯೋಚಿಸಲಾಗುವುದು’ ಎಂದು ಹೇಳಿದರು.
ರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗುವಿರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವಂತೆ ನನಗೆ ಆಹ್ವಾನ ನೀಡಲಾಗಿದೆ. ಬೇರೆ ಕೆಲಸದಲ್ಲಿ ನಿರತರಾಗಿರುವುದರಿಂದ ಈ ಬಗ್ಗೆ ನಾನು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.