ನವದೆಹಲಿ: ಕಾಂಗ್ರೆಸ್– ಜೆಡಿಎಸ್ ಶಾಸಕರನ್ನು ಸೆಳೆದು, ವರಿಷ್ಠರ ಸೂಚನೆಯಂತೆ ಸರ್ಕಾರ ರಚಿಸಿದ್ದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ ಎನ್ನಲಾದ ಆಡಿಯೊವನ್ನು ಅನರ್ಹತೆ ಆದೇಶ ಪ್ರಶ್ನಿಸಿರುವ ಪ್ರಕರಣದ ಸಾಕ್ಷ್ಯವನ್ನಾಗಿ ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮಂಗಳವಾರ ನಡೆಸಿದ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ತ್ರಿಸದಸ್ಯ ಪೀಠವು ‘ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪನ್ನು ಕಾಯ್ದಿರಿಸಿದ್ದು, ಮತ್ತೊಂದು ಆದೇಶ ನೀಡಲಾಗದು’ಎಂದು ಹೇಳಿತು.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಂತರ ನೀಡಲಾದ ದಾಖಲೆಯನ್ನು ಪರಿಗಣಿಸಲಾಗದು ಎಂದು ನ್ಯಾಯಪೀಠವು ಈ ಮೂಲಕ ತಿಳಿಸಿದೆ.
ಜೆಡಿಎಸ್– ಕಾಂಗ್ರೆಸ್ ಶಾಸಕರನ್ನು ಸೆಳೆಯುವ ಮೂಲಕ ಬಿಜೆಪಿಯವರೇ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿರುವ ಅಂಶವನ್ನು ಯಡಿಯೂರಪ್ಪ ಬಹಿರಂಗಪಡಿಸಿದ್ದಾರೆ. ಸಂಬಂಧಿಸಿದ ಆಡಿಯೊವನ್ನು ದಾಖಲೆಯನ್ನಾಗಿ ಪರಿಗಣಿಸಬೇಕು ಎಂದು ಕಾಂಗ್ರೆಸ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಪೀಠವನ್ನು ಕೋರಿದರು.
ವಿಚಾರಣೆ ಪೂರ್ಣಗೊಂಡ ನಂತರ ಸಲ್ಲಿಸಲಾದ ದಾಖಲೆಗಳನ್ನು ಪರಿಗಣಿಸುವುದು ವ್ಯತಿರಿಕ್ತ ಪರಿಣಾಮಕ್ಕೆ ಕಾರಣವಾಗುತ್ತದೆ. ಇದರಿಂದ ತೀರ್ಪಿನ ಪ್ರಕಟಣೆಯೂ ವಿಳಂಬ ಆಗುತ್ತದೆ ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ಕೃಷ್ಣ ಮುರಾರಿ ಅವರನ್ನು ಒಳಗೊಂಡ ಪೀಠ ಹೇಳಿತು.
ಇಂಥ ಹೇಳಿಕೆ ನೀಡಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ ಎಂದು ಅನರ್ಹರ ಶಾಸಕರ ಪರ ವಕೀಲ ಸಿ.ಎ. ಸುಂದರಂ ದೂರಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.