ADVERTISEMENT

ಅದಾನಿ ವಿಚಾರ | ಪ್ರತಿಪಕ್ಷಗಳ ಪ್ರತಿಭಟನೆ; ಸಂಸತ್ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ

ಪಿಟಿಐ
Published 3 ಫೆಬ್ರುವರಿ 2023, 6:59 IST
Last Updated 3 ಫೆಬ್ರುವರಿ 2023, 6:59 IST
   

ನವದೆಹಲಿ: ಷೇರುಗಳ ಮೌಲ್ಯವನ್ನು ಕೃತಕವಾಗಿ ಏರಿಕೆ–ಇಳಿಕೆ ಮಾಡಿರುವ ಆರೋಪ ಎದುರಿಸುತ್ತಿರುವ ಅದಾನಿ ಕಂಪನಿ ವಿರುದ್ಧ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಪ್ರತಿಭಟನೆ ಮುಂದುವರಿಸಿವೆ.

ಇದರಿಂದಾಗಿ ಲೋಕಸಭೆ ಕಲಾಪವನ್ನು ಮಧ್ಯಾಹ್ನ 2ರ ವರೆಗೆ ಹಾಗೂ ರಾಜ್ಯಸಭೆ ಕಲಾಪವನ್ನು ಮಧ್ಯಾಹ್ನ 2.30ರ ವರೆಗೆ ಮುಂದೂಡಲಾಗಿದೆ.

ಅದಾನಿ ಕಂಪನಿ ವಿಚಾರವಾಗಿ ಸಂಸತ್ತಿನಲ್ಲಿ ಗುರುವಾರವೂ ಗದ್ದಲವೆದ್ದಿತ್ತು. ಹೀಗಾಗಿ ಉಭಯ (ಲೋಕಸಭೆ ಹಾಗೂ ರಾಜ್ಯಸಭೆ) ಸದನಗಳನ್ನು ಇವತ್ತಿಗೆ (ಶುಕ್ರವಾರಕ್ಕೆ) ಮುಂದೂಡಲಾಗಿತ್ತು. ಆದರೆ, ಇಂದು ಕಲಾಪ ಆರಂಭವಾಗುತ್ತಿದ್ದಂತೆ, ಪ್ರತಿಪಕ್ಷಗಳ ನಾಯಕರು ಘೋಷಣೆಗಳನ್ನು ಕೂಗಲಾರಂಭಿಸಿದರು.

ADVERTISEMENT

ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರು, ಪ್ರಶ್ನೋತ್ತರದ ಅವಧಿಯಲ್ಲಿ ಚರ್ಚೆ ನಡೆಸುವಂತೆ ಪ್ರತಿಪಕ್ಷಗಳ ನಾಯಕರಲ್ಲಿ ಮನವಿ ಮಾಡಿದರು. ಮುಂದುವರಿದು, ಬಜೆಟ್‌ ಅಧಿವೇಶನದ ಆರಂಭದಲ್ಲಿ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಉಭಯ ಸದನಗಳನ್ನು ಉದ್ದೇಶಿಸಿ ಮೊದಲ ಭಾಷಣ ಮಾಡಿದ್ದರು. ಆ ಭಾಷಣದ ಮೇಲಿನ ವಂದನಾ ನಿರ್ಣಯದಲ್ಲಿ ಎಲ್ಲರೂ ಭಾಗವಹಿಸುವಂತೆ ಹೇಳಿದರು.

ಹಾಗೆಯೇ, ತಮ್ಮ ವಿಚಾರಗಳನ್ನು ಪ್ರಸ್ತಾಪಿಸಲು ವಿರೋಧ ‍ಪಕ್ಷಗಳಿಗೆ ಸಾಕಷ್ಟು ಸಮಯಾವಕಾಶ ನೀಡುವುದಾಗಿಯೂ ಭರವಸೆ ನೀಡಿದರು.

ಆದಾಗ್ಯೂ ಪಟ್ಟು ಸಡಿಲಿಸದ ವಿರೋಧ ಪಕ್ಷಗಳು ಪ್ರತಿಭಟನೆ ಹಾಗೂ ಘೋಷಣೆಗಳನ್ನು ಕೂಗುವುದನ್ನು ಮುಂದುವರಿಸಿದವು. ಹೀಗಾಗಿ ಕಲಾಪವನ್ನು ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.