
ಚಳಿಗಾಲದ ಅಧಿವೇಶನ
ಪಿಟಿಐ ಚಿತ್ರ
ನವದೆಹಲಿ: ಮನರೇಗಾ ಬದಲು ಜಾರಿಗೊಳಿಸಿರುವ ‘ವಿಬಿ ಜಿ ರಾಮ್ ಜಿ’ ಕಾಯ್ದೆ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಬಜೆಟ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಹಾಗೂ ವಿರೋಧ ಪಕ್ಷಗಳ ನಡುವೆ ಮತ್ತೊಂದು ಸುತ್ತಿನ ಸಂಘರ್ಷ ನಡೆಯುವ ಸಾಧ್ಯತೆ ದಟ್ಟವಾಗಿದೆ.
ಬಜೆಟ್ ಅಧಿವೇಶನದ ಮುನ್ನಾ ದಿನವಾದ ಮಂಗಳವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ, ಈ ವಿಷಯಗಳ ಬಗ್ಗೆ ಚರ್ಚೆಗೆ ವಿರೋಧ ಪಕ್ಷಗಳು ಪಟ್ಟು ಹಿಡಿದವು. ಆದರೆ, ಈ ಬೇಡಿಕೆಯನ್ನು ಸರ್ಕಾರ ಸಾರಾಸಗಟಾಗಿ ತಿರಸ್ಕರಿಸಿತು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸೇರಿದಂತೆ ಹಲವಾರು ಹಿರಿಯ ಸಚಿವರು ಹಾಗೂ ವಿಪಕ್ಷಗಳ ಸದಸ್ಯರು ಭಾಗವಹಿಸಿದ್ದರು.
ಸಭೆಯ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಕಿರಣ್ ರಿಜಿಜು, ‘ಬಜೆಟ್ ಅಧಿವೇಶನದ ಪ್ರಾಥಮಿಕ ಗಮನವು ಬಜೆಟ್ ಕುರಿತು ಆಗಿರುತ್ತದೆ. ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಮಯದಲ್ಲಿ ಸದಸ್ಯರು ಇತರ ವಿಷಯಗಳನ್ನು ಪ್ರಸ್ತಾಪಿಸಬಹುದು‘ ಎಂದರು.
ಬಜೆಟ್ ಅಧಿವೇಶನದ ಶಾಸಕಾಂಗ ಕಾರ್ಯಸೂಚಿಯನ್ನು ಹಂಚಿಕೊಳ್ಳದಿದ್ದಕ್ಕೆ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಸೇರಿದಂತೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದವು. ಇದಕ್ಕೆ ಪ್ರತಿಕ್ರಿಯಿಸಿದ ರಿಜಿಜು, ‘ಸಾಮಾನ್ಯವಾಗಿ ರಾಷ್ಟ್ರಪತಿಗಳ ಭಾಷಣದ ನಂತರ ಈ ಕಾರ್ಯಸೂಚಿಯನ್ನು ಹಂಚಿಕೊಳ್ಳಲಾಗುತ್ತದೆ. ಆದಾಗ್ಯೂ, ಕಾರ್ಯಸೂಚಿ ಹಂಚಿಕೊಳ್ಳಲು ನಾನು ಸಿದ್ಧನಿದ್ದೇನೆ. ಈ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ‘ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.