ADVERTISEMENT

ಬಜೆಟ್ ಅಧಿವೇಶನ: ಜಂಟಿ ಕಾರ್ಯತಂತ್ರ ರೂಪಿಸಲು ವಿರೋಧ ಪಕ್ಷಗಳ ಸಭೆ

ಪಿಟಿಐ
Published 2 ಫೆಬ್ರುವರಿ 2023, 5:58 IST
Last Updated 2 ಫೆಬ್ರುವರಿ 2023, 5:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಬಜೆಟ್ ಅಧಿವೇಶನದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಜಂಟಿ ಕಾರ್ಯತಂತ್ರವನ್ನು ರೂಪಿಸುವ ಸಲುವಾಗಿ ವಿರೋಧ ಪಕ್ಷಗಳು ಗುರುವಾರ ಬೆಳಿಗ್ಗೆ ಸಂಸತ್ತಿನ ಪೂರ್ವಭಾವಿ ಸಭೆ ನಡೆಸಲಿವೆ ಎಂದು ಮೂಲಗಳು ತಿಳಿಸಿವೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ವಿರೋಧ ಪಕ್ಷಗಳ ನಾಯಕರು ಬೆಳಿಗ್ಗೆ ಸಭೆ ನಡೆಸಲಿದ್ದಾರೆ. ಜನವರಿ 31 ರಂದು ಪ್ರಾರಂಭವಾಗಿರುವ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಕುರಿತು ಸಭೆ ನಡೆಯಲಿದೆ.

ಎಲ್ಲ ಸಮಾನ ಮನಸ್ಕ ಪಕ್ಷಗಳು ಅಧಿವೇಶನದಲ್ಲಿ ಸಾರ್ವಜನಿಕ ಹಿತಾಸಕ್ತಿಯ ವಿಚಾರಗಳನ್ನು ಒಕ್ಕೊರಲಿನಿಂದ ಪಸ್ತಾಪಿಸಬೇಕಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ

ADVERTISEMENT

ಅದಾನಿ ಗ್ರೂಪ್‌ ವಿಚಾರ, ಚೀನಾದೊಂದಿಗಿನ ಗಡಿ ಬಿಕ್ಕಟ್ಟು ಮತ್ತು ರಾಜ್ಯ ಸರ್ಕಾರಗಳಲ್ಲಿ ರಾಜ್ಯಪಾಲರ ಪಾತ್ರ ಸೇರಿದಂತೆ ಹಲವು ವಿಚಾರಗಳ ಕುರಿತು ಸಂಸತ್ತಿನಲ್ಲಿ ಸಮಗ್ರವಾಗಿ ಚರ್ಚಿಸಲು ವಿರೋಧ ಪಕ್ಷಗಳು ಮುಂದಾಗಿವೆ.

ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳನ್ನು ಉದ್ದೇಶಿಸಿ ಚೊಚ್ಚಲ ಭಾಷಣ ಮಾಡಿದ್ದರು. ರಾಷ್ಟ್ರಪತಿಗಳ ಭಾಷಣ ಮೇಲಿನ ವಂದನಾ ನಿರ್ಣಯದ ಕುರಿತು ಮಂಗಳವಾರ ಚರ್ಚೆ ನಡೆದಿತ್ತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಕೇಂದ್ರ ಬಜೆಟ್‌ ಮಂಡಿಸಿದ್ದಾರೆ.

ಬಜೆಟ್‌ ಅಧಿವೇಶನದ ವಿಚಾರವಾಗಿ ಕಾಂಗ್ರೆಸ್ ಕಾರ್ಯತಂತ್ರದ ಕುರಿತು ಚರ್ಚಿಸಲು ಪಕ್ಷದ ಕಾರ್ಯತಂತ್ರ ಸಮಿತಿಯು ಕಾಂಗ್ರೆಸ್ ಸಂಸದೀಯ ಪಕ್ಷದ ಕಚೇರಿಯಲ್ಲಿ ಬೆಳಿಗ್ಗೆ 9.15 ಕ್ಕೆ ಸಭೆ ಸೇರಿತ್ತು ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.