
ಹೈದರಾಬಾದ್: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರನ್ನು ತೆಲಂಗಾಣ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯಿದೆ ಎಂಬ ಊಹಾಪೋಹಗಳು ಹಬ್ಬಿವೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ಬೊಮ್ಮ ಮಹೇಶ್ ಕುಮಾರ್ ಗೌಡ, ‘ಸಂಪುಟ ಸೇರುವ ಸಾಧ್ಯತೆ ಇರಬಹುದು. ಆದರೆ, ಇದನ್ನು ನಾನು ದೃಢೀಕರಿಸಲು ಅಥವಾ ನಿರಾಕರಿಸಲು ಸಾಧ್ಯವಿಲ್ಲ’ ಎಂದು ತಿಳಿಸಿದ್ದಾರೆ.
ತೆಲಂಗಾಣ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೇರಿ 15 ಸದಸ್ಯರಿದ್ದು, ಅಲ್ಪಸಂಖ್ಯಾತ ಸಮುದಾಯಕ್ಕೆ ಯಾವುದೇ ಪ್ರಾತಿನಿಧ್ಯವಿಲ್ಲ. ನಿಯಮಗಳ ಪ್ರಕಾರ ಸಂಪುಟದಲ್ಲಿ ಇನ್ನೂ ಮೂವರಿಗೆ ಅವಕಾಶವಿದೆ. ಒಂದು ವೇಳೆ ಅಜರುದ್ದೀನ್ ಅವರು ಸಂಪುಟಕ್ಕೆ ಸೇರ್ಪಡೆಯಾದರೆ, ರೇವಂತ ರೆಡ್ಡಿ ಅವರ ಸಚಿವ ಸಂಪುಟದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮೊದಲ ಸಚಿವರಾಗಿರಲಿದ್ದಾರೆ.
ಅಜರುದ್ದೀನ್ ಅವರನ್ನು ವಿಧಾನ ಪರಿಷತ್ತಿನ ಸದಸ್ಯರಾಗಿ ತೆಲಂಗಾಣ ಸರ್ಕಾರವು ಆಗಸ್ಟ್ ಕೊನೆಯ ವಾರದಲ್ಲಿ ನಾಮನಿರ್ದೇಶನ ಮಾಡಿತ್ತು. ಆದರೆ ರಾಜ್ಯಪಾಲರು ಇನ್ನೂ ಅನುಮೋದನೆ ನೀಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.