ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭೆಯ ಭವಾನಿಪುರ ಕ್ಷೇತ್ರಕ್ಕೆ ಉಪಚುನಾವಣೆ ನಡೆಸುವ ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಕಲ್ಕತ್ತ ಹೈಕೋರ್ಟ್ ಮಂಗಳವಾರ ವಜಾ ಮಾಡಿದೆ. ಈಗ ನಿಗದಿ ಪಡಿಸಿರುವಂತೆ ಸೆ.30ರಂದೇ ಚುನಾವಣೆ ನಡೆಯಲಿದೆ ಎಂದೂ ತಿಳಿಸಿದೆ.
ಹಂಗಾಮಿ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಮತ್ತು ನ್ಯಾಯಮೂರ್ತಿ ಆರ್.ಭಾರಧ್ವಾಜ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿತು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಕಣದಲ್ಲಿದ್ದಾರೆ.
ಭವಾನಿಪುರ ಕ್ಷೇತ್ರಕ್ಕೆ ಉಪಚುನಾವಣೆ ನಡೆಸಬೇಕು ಎಂದು ಕೋರಿ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಆಯೋಗಕ್ಕೆ ಪತ್ರ ಬರೆದಿರುವ ಕ್ರಮವು ಸರಿಯಾದುದಲ್ಲ ಎಂದು ಇದೇ ವೇಳೆ ಪೀಠವು ಅಭಿಪ್ರಾಯಪಟ್ಟಿತು.
ಉಪಚುನಾವಣೆ ನಡೆಸಲು ಮನವಿ ಮಾಡಿ ಬರೆದಿದ್ದ ಪತ್ರದಲ್ಲಿನ ಪದಗಳ ಬಳಕೆಯನ್ನು ಉಲ್ಲೇಖಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಮುಖ್ಯ ಕಾರ್ಯದರ್ಶಿ ಅವರು ತಮ್ಮ ಪತ್ರದಲ್ಲಿ ಕ್ಷೇತ್ರಕ್ಕೆ ಉಪಚುನಾವಣೆಯು ನಡೆಯದಿದ್ದರೆ ‘ಸಾಂವಿಧಾನಿಕ ಬಿಕ್ಕಟ್ಟು’ ಉದ್ಭವಿಸಲಿದೆ ಎಂದು ಅಭಿಪ್ರಾಯಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.