ಕೋಲ್ಕತ್ತ: ಪಶ್ಚಿಮ ಬಂಗಾಳದ ರಾಜ್ಯಪಾಲರ ಹುದ್ದೆಯಿಂದ ಜಗದೀಪ್ ಧನಕರ್ ಅವರನ್ನು ವಜಾಗೊಳಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕಲ್ಕತ್ತ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವತ್ಸ ಮತ್ತು ನ್ಯಾಯಮೂರ್ತಿ ಆರ್. ಭಾರದ್ವಾಜ್ ಅವರನ್ನೊಳಗೊಂಡ ವಿಭಾಗೀಯ ಪೀಠವು,ಸಂವಿಧಾನದ 361ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರು ತಮ್ಮ ಕಚೇರಿಯ ಆಡಳಿತ, ಅಧಿಕಾರ ಮತ್ತು ಕರ್ತವ್ಯಗಳ ನಿರ್ವಹಣೆಯಲ್ಲಿ ಯಾವುದೇ ನ್ಯಾಯಾಲಯಕ್ಕೆ ಉತ್ತರದಾಯಿಗಳಲ್ಲ ಎಂದು ಹೇಳಿದೆ.
ಧನಕರ್ ಅವರು ರಾಜ್ಯ ಸರ್ಕಾರದ ಆಡಳಿತದಲ್ಲಿ ಮಧ್ಯಪ್ರವೇಶಿಸುತ್ತಿದ್ದಾರೆ. ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಟು ಟೀಕೆ ಮಾಡುವ ಮೂಲಕ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದುಆರೋಪಿಸಿ ಹೈಕೋರ್ಟ್ ವಕೀಲ, ಅರ್ಜಿದಾರ ರಾಮ ಪ್ರಸಾದ್ ಸರ್ಕಾರ್ ಅವರು ರಿಟ್ ಅರ್ಜಿ ಸಲ್ಲಿಸಿದ್ದರು.
ಅಲ್ಲದೆ, ಧನಕರ್ ಅವರು ಬಿಜೆಪಿಯ ಮುಖವಾಣಿಯಂತೆ ನಡೆದುಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಚಿವರುಗಳಿಗೆ ನೇರವಾಗಿ ನಿರ್ದೇಶನ ನೀಡುವ ಮೂಲಕ ಸಂವಿಧಾನವನ್ನು ಉಲ್ಲಂಘಿಸುತ್ತಿದ್ದಾರೆ ಎಂದು ರಾಮ ಪ್ರಸಾದ್ ಸರ್ಕಾರ್ ಆರೋಪಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.