ADVERTISEMENT

ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ: ಮಮತಾ ಬ್ಯಾನರ್ಜಿ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2019, 12:38 IST
Last Updated 13 ಡಿಸೆಂಬರ್ 2019, 12:38 IST
   

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಿಡಿಕಾರಿದ್ದು, ಯಾವುದೇ ಸಂದರ್ಭದಲ್ಲಿಯೂ ನಮ್ಮ ರಾಜ್ಯದಲ್ಲಿ ಈ ಕಾನೂನನ್ನು ಅನುಷ್ಠಾನಗೊಳಿಸಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು, ಪೌರತ್ವ ತಿದ್ದುಪಡಿ ಕಾನೂನು ಜಾರಿಗೆ ಕೇಸರಿ ಪಕ್ಷವು ರಾಜ್ಯವನ್ನು ಹೆದರಿಸಲು ಸಾಧ್ಯವಿಲ್ಲ. ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‍ಆರ್‌ಸಿ) ನೀತಿ ಮತ್ತು ಪೌರತ್ವ ಕಾಯ್ದೆಯನ್ನು ಪಶ್ಚಿಮ ಬಂಗಾಳದಲ್ಲಿ ನಾವು ಒಪ್ಪಿಕೊಳ್ಳುವುದಿಲ್ಲ. ಸಂಸತ್ತಿನಲ್ಲಿ ಮಸೂದೆಯು ಅಂಗೀಕಾರಗೊಂಡಿದ್ದರೂ ಕೂಡ ನಾವು ಇಲ್ಲಿ ಮಸೂದೆ ಅನುಷ್ಠಾನಕ್ಕೆ ಅವಕಾಶ ಕೊಡುವುದಿಲ್ಲ ಎಂದು ಹೇಳಿದರು.

ಡಿಸೆಂಬರ್ 16 ರಿಂದ 18ರವರೆಗೆ ರಾಜ್ಯದಾದ್ಯಂತ ಸರಣಿ ಪ್ರತಿಭಟನೆ ಕಾರ್ಯಕ್ರಮಗಳನ್ನು ಘೋಷಿಸಿದ ಅವರು, ಮಹಾತ್ಮ ಗಾಂಧಿಯವರ 150ನೇ ಜನ್ಮ ಶತಮಾನೋತ್ಸವ ಆಚರಣೆ ಸಭೆಗೆ ತೆರಳಲುದೆಹಲಿಗೆ ಭೇಟಿ ನೀಡುವುದನ್ನು ರದ್ದುಗೊಳಿಸಿರುವುದಾಗಿತಿಳಿಸಿದರು.

ADVERTISEMENT

ಪೌರತ್ವ ತಿದ್ದುಪಡಿ ಕಾಯ್ದೆಯು ಭಾರತವನ್ನು ಒಡೆಯುತ್ತದೆ. ನಾವು ಅಧಿಕಾರದಲ್ಲಿರುವವರೆಗೂ ರಾಜ್ಯದ ಯಾವೊಬ್ಬ ವ್ಯಕ್ತಿಯೂ ಈ ದೇಶವನ್ನು ತೊರೆಯಬೇಕಾಗಿಲ್ಲ ಎಂದರು.

ಈ ಕಾಯ್ದೆಯು ಮುಸ್ಲಿಮೇತರ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನದ ವಲಸಿಗರಿಗೆ ಭಾರತದ ಪೌರತ್ವ ಸಿಗುವುದನ್ನು ಸುಲಭಗೊಳಿಸಿದೆ. ವಿಪಕ್ಷಗಳು ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದು, ಇದು ತಾರತಮ್ಯ ಮತ್ತು ಸಂವಿಧಾನದ ಸಮಾನತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.