ಇಂದೋರ್: ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ನಡೆಸಿದ ರೋಡ್ ಶೋ ವೇಳೆ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
‘ಉಪಚುನಾವಣೆಯು ನ.3 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಇಂದೋರ್ನ ಸನ್ವೇರ್ ಪ್ರಾಂತ್ಯದಲ್ಲಿ ರೋಡ್ ಶೋ ನಡೆಸಿದರು. ಈ ವೇಳೆ ಕೋವಿಡ್ ಮಾರ್ಗಸೂಚಿಯನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದಡಿ ಸ್ಥಳೀಯ ಬಿಜೆಪಿ ನಾಯಕರೊಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
‘ಕೆಲವೊಂದು ಷರತ್ತಿನಡಿ ರೋಡ್ ಶೋ ನಡೆಸಲು ಅನುಮತಿಯನ್ನು ನೀಡಲಾಗಿತ್ತು. ರೋಡ್ ಶೋ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಗಿತ್ತು. ಅಲ್ಲದೇ ಕೇವಲ ಐದು ವಾಹನಗಳಿಗೆ ಮಾತ್ರ ಅನುಮತಿ ನೀಡಲಾಗಿತ್ತು’ ಎಂದು ಸನ್ವೇರ ಪೊಲೀಸ್ ಠಾಣೆಯ ಅಧಿಕಾರಿ ಸಂತೋಷ್ ಕುಮಾರ್ ದುದಿ ಅವರು ಹೇಳಿದರು.
‘ರೋಡ್ ಶೋ ವೇಳೆ 20 ರಿಂದ 25 ವಾಹನಗಳಿದ್ದವು. ಈ ವೇಳೆ ಸಾಮಾಜಿಕ ಅಂತರವನ್ನು ಪಾಲಿಸಿಲ್ಲ. ಅಲ್ಲದೇ ಹಲವರು ಮುಖಗವಸನ್ನು ಕೂಡ ಧರಿಸಿಲ್ಲ ಎಂದು ಚುನಾವಣಾಧಿಕಾರಿ ಪತ್ರದಲ್ಲಿ ಹೇಳಿದ್ಧಾರೆ. ಹಾಗಾಗಿ ರೋಡ್ ಶೋಗೆ ಅನುಮತಿ ಪಡೆದ ದಿನೇಶ್ ಬನ್ಸವಾರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ’ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.