ADVERTISEMENT

ದ್ವೇಷ ಪೂರಿತ ಭಾಷಣ; ಶರಜೀಲ್‌ ಉಸ್ಮಾನಿ ವಿರುದ್ಧ ದೂರು ದಾಖಲು

ಪಿಟಿಐ
Published 3 ಫೆಬ್ರುವರಿ 2021, 5:38 IST
Last Updated 3 ಫೆಬ್ರುವರಿ 2021, 5:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಪುಣೆ: ಧರ್ಮಗಳ ನಡುವೆ ದ್ವೇಷವನ್ನು ಉತ್ತೇಜಿಸುವುದಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿರುವ ಅಲಿಗಡ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿ ಶರಜೀಲ್‌ ಉಸ್ಮಾನಿ ವಿರುದ್ಧ ಪುಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಶರಜೀಲ್‌ ಉಸ್ಮಾನಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಮಹಾರಾಷ್ಟ್ರದ ವಿರೋಧ ಪಕ್ಷ ಬಿಜೆಪಿ ದೂರು ಸಲ್ಲಿಸಿತ್ತು.

ಈ ಕುರಿತು ಮಾಹಿತಿ ನೀಡಿರುವ ಪುಣೆ ಪೂಲೀಸ್ ಆಯುಕ್ತ ಅಮಿತಾಬ್ ಗುಪ್ತಾ, ವಿವಿಧ ಧರ್ಮಗಳ ನಡುವೆ ದ್ವೇಷವನ್ನು ಉತ್ತೇಜಿಸುವುದಕ್ಕೆ ಸಂಬಂಧಿಸಿದಂತೆ ಶರಜೀಲ್‌ ಉಸ್ಮಾನಿ ವಿರುದ್ಧ ಐಪಿಸಿ ಸೆಕ್ಷನ್ 153 (ಎ) ಅಡಿಯಲ್ಲಿ ದೂರು ದಾಖಲಿಸಲಾಗಿದೆ ಎಂಬುದನ್ನು ಸ್ಪಷ್ಟಪಡಿಸಿದರು.

ADVERTISEMENT

ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂಬುದನ್ನು ಅಮಿತಾಬ್ ಗುಪ್ತಾ ಖಚಿತಪಡಿಸಿದರು.

ಜನವರಿ 30ರಂದು ನಡೆದ ಎಲ್ಗಾರ್ ಪರಿಷತ್ ಸಮಾವೇಶದಲ್ಲಿ ಶರಜೀಲ್‌ ಉಸ್ಮಾನಿ ಭಾಷಣ ಮಾಡಿದ್ದರು. ಅದು ಪ್ರಚೋದನಕಾರಿಯಾಗಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗಿತ್ತು.

ಈ ಮೊದಲು ಹಿಂದೂ ಧರ್ಮದ ಭಾವನೆಗಳನ್ನು ಅವಮಾನಿಸಿರುವ ಶರಜೀಲ್‌ ಉಸ್ಮಾನಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್ ಆಗ್ರಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.