ADVERTISEMENT

ಕಾವೇರಿ: ಪ್ರಾಧಿಕಾರದ ಸಭೆ ಇಂದು

ಮುಂಗಾರು ಹಂಗಾಮಿನ ನಿರ್ವಹಣೆ ಚರ್ಚೆ

​ಪ್ರಜಾವಾಣಿ ವಾರ್ತೆ
Published 27 ಮೇ 2019, 20:00 IST
Last Updated 27 ಮೇ 2019, 20:00 IST
   

ನವದೆಹಲಿ: ಮುಂಗಾರು ಹಂಗಾಮಿನಲ್ಲಿ ಕಾವೇರಿ ನದಿ ನೀರಿನ ಹಂಚಿಕೆ, ಬೇಸಿಗೆ ಮುಗಿಯುವವರೆಗೆ ನೀರಿನ ನಿರ್ವಹಣೆ, ಮತ್ತಿತರ ವಿಷಯಗಳ ಕುರಿತು ಚರ್ಚಿಸುವ ಉದ್ದೇಶದಿಂದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಮಂಗಳವಾರ ನಡೆಯಲಿದೆ.

2018–19ನೇ ಸಾಲಿನ ಕೊನೆಯ ಸಭೆ ಇದಾಗಲಿದ್ದು, ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ)ದ ಮುಖ್ಯಸ್ಥರಾಗಿರುವ ಮಸೂದ್‌ ಹುಸೇನ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಸಿಡಬ್ಲ್ಯೂಸಿ ಕಚೇರಿಯ ಸಭಾಂಗಣದಲ್ಲಿ ನಡೆಯುವ ಸಭೆಯಲ್ಲಿ ಕಾವೇರಿ ಕಣಿವೆ ವ್ಯಾಪ್ತಿಯ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿಯ ಪ್ರತಿನಿಧಿಗಳು ಭಾಗವಹಿಸುವರು.

ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ಮಳೆ ಸುರಿಯುವ ಸಾಧ್ಯತೆ, ಜಲಾಶಯಗಳ ಒಳಹರಿವು ಮತ್ತು ಹೊರಹರಿವು, ಜಲಾನಯನ ಪ್ರದೇಶದಲ್ಲಿ ಲಭ್ಯವಾಗಲಿರುವ ನೀರಿನ ಸಮಗ್ರ ನಿರ್ವಹಣೆಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಪೂರ್ವಭಾವಿ ಚರ್ಚೆ ನಡೆಯಲಿದೆ.

ADVERTISEMENT

ಕೃಷ್ಣರಾಜ ಸಾಗರ ಜಲಾಶಯ ವ್ಯಾಪ್ತಿಯ ರೈತರು ಬೇಸಿಗೆ ಬೆಳೆಗೆ ನೀರಿನ ಬೇಡಿಕೆ ಇರಿಸಿರುವುದರ ಕುರಿತೂ ಕರ್ನಾಟಕದ ಪ್ರತಿನಿಧಿಗಳು ಸಭೆಯಲ್ಲಿ ಪ್ರಸ್ತಾಪಿಸಲಿದ್ದಾರೆ.

ಆದರೆ, ಜೂನ್ ತಿಂಗಳ ತನ್ನ ಪಾಲಿನ 9.25 ಟಿಎಂಸಿ ಅಡಿ ನೀರನ್ನು ಕರ್ನಾಟಕದಿಂದ ಬಿಡುಗಡೆ ಮಾಡಿಸುವಂತೆ ತಮಿಳುನಾಡಿನ ಪ್ರತಿನಿಧಿಗಳು ಪ್ರಾಧಿಕಾರವನ್ನು ಒತ್ತಾಯಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.