ADVERTISEMENT

ತಮಿಳುನಾಡಿಗೆ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಸಲಹೆ

ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಚರ್ಚೆ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2021, 20:09 IST
Last Updated 11 ಅಕ್ಟೋಬರ್ 2021, 20:09 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಜಲಾಶಯಗಳಲ್ಲಿನ ನೀರಿನ ಲಭ್ಯತೆ ಆಧರಿಸಿ ಕರ್ನಾಟಕವು ತಮಿಳುನಾಡಿನ ಪಾಲಿನ ನೀರನ್ನು ಹರಿಸಬಹುದಾಗಿದೆ ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಲಹೆ ನೀಡಿದೆ.

ನವೀನ್ ಕುಮಾರ್ ಅಧ್ಯಕ್ಷತೆಯ ಸಮಿತಿಯು ಸೋಮವಾರ ಇಲ್ಲಿ ನಡೆಸಿದ ಸಭೆಯಲ್ಲಿ ಭಾಗವಹಿಸಿದ್ದ ಕಾವೇರಿ ಕಣಿವೆಯ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿಯ ಪ್ರತಿನಿಧಿಗಳು ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಸುರಿದ ಮಳೆಯ ವಿವರ, ನೀರಿನ ಲಭ್ಯತೆ ಹಾಗೂ ಕೃಷಿ ಮತ್ತು ಕುಡಿಯುವ ನೀರಿನ ಅಗತ್ಯದ ಕುರಿತು ಮಾಹಿತಿ ಒದಗಿಸಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ರಾಜ್ಯದ ಅಧಿಕಾರಿಗಳು, ಕರ್ನಾಟಕದ ಜಲಾಶಯಗಳಲ್ಲಿ ನೀರಿನ ಕೊರತೆ ಇದೆ ಎಂದು ಪುನರುಚ್ಚರಿಸಿದರು. ಆದರೆ, ತಮಿಳುನಾಡು ನೀರಿಗೆ ಬೇಡಿಕೆ ಇರಿಸಿದ ಕಾರಣ, ಲಭ್ಯ ಪ್ರಮಾಣದಲ್ಲೇ ಒಂದಷ್ಟು ನೀರನ್ನು ತಮಿಳುನಾಡಿಗೆ ಹರಿಸಬಹುದು ಎಂದು ಸಮಿತಿಯು ರಾಜ್ಯಕ್ಕೆ ಸಲಹೆ ನೀಡಿತು.

ADVERTISEMENT

ಸಭೆಯ ನಡಾವಳಿಯ ವಿವರವನ್ನು ಸಮಿತಿಯು ಎಸ್‌.ಕೆ. ಹಾಲ್ದಾರ್‌ ಅಧ್ಯಕ್ಷತೆಯ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಸಲ್ಲಿಸಲಿದ್ದು, ನೀರು ಹಂಚಿಕೆ ಸಂಬಂಧ ಶೀಘ್ರವೇ ಪ್ರಾಧಿಕಾರದ ಸಭೆ ನಡೆಯಲಿದೆ.

ಪ್ರಾಧಿಕಾರವು ಸೆಪ್ಟೆಂಬರ್‌ 27ರಂದು ಆಯೋಜಿಸಿದ್ದ ಸಭೆಯಲ್ಲಿ ಸಮರ್ಪಕ ಮಳೆಯ ಕೊರತೆಯ ಕಾರಣ ಮುಂದುರಿಸಿದ್ದ ಕರ್ನಾಟಕವು, ತಮಿಳುನಾಡಿಗೆ ನೀರು ಹರಿಸಲು ನಿರಾಕರಿಸಿತ್ತು.

ಅಕ್ಟೋಬರ್‌ 7ರೊಳಗೆ ಜಲಾಶಯಗಳಲ್ಲಿನ ನೀರಿನ ಸಂಗ್ರಹದ ಪ್ರಮಾಣ ಕುರಿತ ಸಮಗ್ರ ವರದಿ ಸಲ್ಲಿಸುವಂತೆ ಕರ್ನಾಟಕಕ್ಕೆ ತಿಳಿಸಿದ್ದ ಪ್ರಾಧಿಕಾರ, ಜೂನ್‌ನಿಂದ ಆಗಸ್ಟ್‌ ಅಂತ್ಯದವರೆಗೆ ತಮಿಳುನಾಡಿನ ಪಾಲಿನ 29.79 ಟಿಎಂಸಿ ಅಡಿ ನೀರು ಹರಿಸುವಂತೆ ಸೂಚಿಸಿತ್ತು. ಆದರೆ, ಮಳೆಯನ್ನು ಆಧರಿಸಿ ಹಾಗೂ ಜಲಾಶಯಗಳಲ್ಲಿ ಸಂಗ್ರಹವಾಗುವ ನೀರಿನ ಪ್ರಮಾಣ ಅವಲೋಕಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಸ್ಪಷ್ಟಪಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.