ಚೆನ್ನೈ: ವಿದ್ಯಾರ್ಥಿನಿ ಲಾವಣ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮದ್ರಾಸ್ ಹೈಕೋರ್ಟ್ನ ಮದುರೈ ಪೀಠದ ನಿರ್ದೇಶನದಂತೆ ಸಿಬಿಐ ಮಂಗಳವಾರ ಎಫ್ಐಆರ್ ದಾಖಲಿಸಿದೆ.
ಪ್ರಕರಣ ಕುರಿತು ತನಿಖೆ ನಡೆಸುವಂತೆ ಮದ್ರಾಸ್ ಹೈಕೋರ್ಟ್ ಜನವರಿ 31ರಂದು ನೀಡಿದ್ದ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಸೋಮವಾರ ಸೂಚಿಸಿತ್ತು.
ತಂಜಾವೂರು ಜಿಲ್ಲೆ ಮೈಕಲ್ಪಟ್ಟಿಯಲ್ಲಿರುವ ಸೆಕ್ರೆಡ್ ಹಾರ್ಟೆಡ್ ಹೈಯರ್ ಸೆಕಂಡರಿ ಸ್ಕೂಲ್ನ ಲಾವಣ್ಯ (17) ಎಂಬ ವಿದ್ಯಾರ್ಥಿನಿ ಜ.9ರಂದು ವಿಷ ಸೇವಿಸಿದ್ದಳು. ಚಿಕಿತ್ಸೆಗೆ ಸ್ಪಂದಿಸದೇ ಜ. 19ರಂದು ಮೃತಪಟ್ಟಿದ್ದಳು.
‘ತನ್ನನ್ನು ಒತ್ತಾಯಪೂರ್ವಕವಾಗಿ ಕ್ರೈಸ್ತ ಮತಕ್ಕೆ ಮತಾಂತರ ಮಾಡುವ ಯತ್ನಗಳಿಂದ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ’ ಎಂದು ಬಿಜೆಪಿ ಆರೋಪಿಸಿದೆ. ಮಗಳ ಸಾವಿನ ಕುರಿತು ಸಿಬಿಐ ತನಿಖೆ ನಡೆಸುವಂತೆ ಕೋರಿ ಲಾವಣ್ಯ ತಂದೆ ಹೈಕೋರ್ಟ್ನ ಮದುರೈ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು.
ಬಂಧನ: ಲಾವಣ್ಯ ಸಾವಿಗೆ ನ್ಯಾಯ ನೀಡಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮನೆ ಮುಂದೆ ಮತಪ್ರದರ್ಶನ ಮಾಡಿದ ಎಬಿವಿಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿಧಿ ತ್ರಿಪಾಠಿ ಸೇರಿ 32 ಮಂದಿ ಕಾರ್ಯಕರ್ತರನ್ನು ಪೊಲೀಸರು ಮಂಗಳವಾರ ಬಂಧಿಸಿದರು. ಬಂಧಿತರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.